ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪ್ರತಿಸ್ಪರ್ಧಿ ಕೆ.ಎನ್‌.ಶಾಂತ್‌ಕುಮಾರ್‌ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಅವರು ಈ ನಿರ್ಧಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ. ಬ್ರಿಜೇಶ್‌ ಪಟೇಲ್‌ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪತ್ರಿಕೋದ್ಯಮಿ ಕೆ.ಎನ್‌.ಶಾಂತ್‌ಕುಮಾರ್‌ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕೃತಗೊಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಶಾಂತ್‌ಕುಮಾರ್‌ ಪ್ರತಿನಿಧಿಸುವ ಕ್ರಿಕೆಟ್‌ ಕ್ಲಬ್‌, ಲೀಗ್‌ನಲ್ಲಿ ಆಡಲು ನೋಂದಣಿ ಮಾಡಿಕೊಳ್ಳುವಾಗ ₹200 ಸಬ್‌ಸ್ಕ್ರಿಷ್ಷನ್‌ ಶುಲ್ಕ ಪಾವತಿಸಿಲ್ಲ ಎನ್ನುವ ಕಾರಣಕ್ಕೆ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಇನ್ನು, ವೆಂಕಿ ಬಣದಿಂದ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ, ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್‌ ಮೃತ್ಯುಂಜಯ ಅವರ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡಿದೆ.

ವೆಂಕಿ ಬಣದಲ್ಲಿರುವ ಮಾಜಿ ಆಟಗಾರ್ತಿ ಕಲ್ಪನಾ ವೆಂಕಟಾಚಾರ್‌ ಕೂಡ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರು ನಾಮಪತ್ರ ಹಿಂಪಡೆದಿದ್ದಾರೆ. ನಾಮಪತ್ರ ಹಿಂಪಡೆಯಲು ನ.27 ಕೊನೆ ದಿನವಾಗಿದ್ದು, ಪ್ರಸಾದ್‌ ಅವಿರೋಧ ಆಯ್ಕೆ ಬಗ್ಗೆ ಬುಧವಾರ ಅಧಿಕೃತ ಘೋಷಣೆಯಾಗುವ ನಿರೀಕ್ಷೆ ಇದೆ.

ಕಣದಲ್ಲಿರುವ ಅಭ್ಯರ್ಥಿಗಳು

ಅಧ್ಯಕ್ಷ: ವೆಂಕಟೇಶ್‌ ಪ್ರಸಾದ್‌

ಉಪಾಧ್ಯಕ್ಷ: ವಿನೋದ್‌ ಶಿವಪ್ಪ (ಬ್ರಿಜೇಶ್‌ ಬಣ), ಸಂತೋಷ್‌ ಮೆನನ್‌, ಸುಜಿತ್‌ ಸೋಮ್‌ಸುಂದರ್‌, ಕಲ್ಪನಾ ವೆಂಕಟಚಾರ್‌, ಬಿ.ಎನ್‌.ಮಧುಕರ್‌ (ವೆಂಕಿ ಬಣ)

ಕಾರ್ಯದರ್ಶಿ: ಇ.ಎಸ್‌.ಜಯರಾಂ (ಬ್ರಿಜೇಶ್‌ ಬಣ), ಸುಜಿತ್‌, ಸಂತೋಷ್‌ ಮೆನನ್‌ (ವೆಂಕಿ ಬಣ)

ಜಂಟಿ ಕಾರ್ಯದರ್ಶಿ: ಬಿ.ಕೆ.ರವಿ (ಬ್ರಿಜೇಶ್‌ ಬಣ), ಎ.ವಿ.ಶಶಿಧರ, ಅವಿನಾಶ್‌ ವೈದ್ಯ (ವೆಂಕಿ ಬಣ)

ಖಜಾಂಚಿ: ಮಧುಕರ್‌, ಶಶಿಧರ, ಕಲ್ಪನಾ, ಎಂ.ಎಸ್‌.ವಿನಯ್‌ (ಬ್ರಿಜೇಶ್‌ ಬಣ), ಬಿ.ಎನ್‌.ಸುಬ್ರಮಣ್ಯ

ಚುನಾವಣಾಧಿಕಾರಿ ವಿರುದ್ಧ ಶಾಂತ್‌ಕುಮಾರ್‌ ಕೋರ್ಟ್‌ಗೆ

₹200 ಶುಲ್ಕ ಕಟ್ಟಿಲ್ಲ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಾಮಪತ್ರ ತಿರಸ್ಕೃತಗೊಳಿಸಿರುವ ಚುನಾವಣಾ ಅಧಿಕಾರಿ ವಿರುದ್ಧ ಕೆಎಸ್‌ಸಿಎ ಅಧ್ಯಕ್ಷ ಹುದ್ದೆ ಆಕಾಂಕ್ಷಿ ಕೆ.ಎನ್‌.ಶಾಂತ್‌ಕುಮಾರ್‌ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಹಾಕಿದ್ದು, ಅರ್ಜಿಯು ಬುಧವಾರ ವಿಚಾರಣೆಗೆ ಬರಲಿದೆ.

ಕೆಎಸ್‌ಸಿಎಯಿಂದಲೇ ತಪ್ಪಾಗಿದೆ: ಶಾಂತ್‌ಕುಮಾರ್‌ ಬಣ ವಾದ

ಲೀಗ್‌ಗೆ ನೋಂದಣಿ ಮಾಡಿಸಿಕೊಳ್ಳುವಾಗ ಕೆಎಸ್‌ಸಿಎ ಶುಲ್ಕ ಪಾವತಿಸುವಂತೆ ಕೇಳಿಲ್ಲ. ಅಲ್ಲದೇ, ಶುಲ್ಕ ಪಾವತಿ ಬಾಕಿ ಇರುವ ಬಗ್ಗೆ ಕೆಎಸ್‌ಸಿಎ ನೋಟಿಸ್‌ ಸಹ ನೀಡಿಲ್ಲ. ವಾರ್ಷಿಕ ಸಭೆಗೂ ಮುನ್ನ ಬಾಕಿ ಪಾವತಿಸಬೇಕು ಎನ್ನುವುದು ನಿಯಮ. ನ.30ಕ್ಕೆ ವಾರ್ಷಿಕ ಸಭೆ ಇದ್ದು, ಅದಕ್ಕೆ ಮುನ್ನ ಬಾಕಿ ಪಾವತಿಸಲು ಅವಕಾಶವಿದೆ. ಹೀಗಾಗಿ, ನಾಮಪತ್ರ ತಿರಸ್ಕೃತಗೊಳಿಸಿದ್ದು ಸರಿಯಾದ ಕ್ರಮವಲ್ಲ ಎಂದು ಶಾಂತ್‌ಕುಮಾರ್‌ ಬಣದ ಸದಸ್ಯರೊಬ್ಬರು ‘ಕನ್ನಡಪ್ರಭ’ಕ್ಕೆ ತಿಳಿಸಿದರು.