ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ, ಟೀಂ ಇಂಡಿಯಾದ ಸರಣಿ ಸೋಲುಗಳಿಗೆ ನೈತಿಕ ಹೊಣೆ ಹೊತ್ತು ಹೆಡ್‌ ಕೋಚ್ ಗೌತಮ್ ಗಂಭೀರ್ ಕೂಡ ರಾಜೀನಾಮೆ ನೀಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹ ಹೆಚ್ಚಾಗಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣವಾದ 'ಎಕ್ಸ್‌' ಖಾತೆಯಲ್ಲಿ ಟೀಂ ಇಂಡಿಯಾ ಹೆಡ್‌ ಕೋಚ್ ಗೌತಮ್ ಗಂಭೀರ್ ಹಾಗೂ ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಏಕಕಾಲದಲ್ಲಿ ಟ್ರೆಂಡ್ ಆಗಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಕಾಕೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಯ ತೀವ್ರತೆ ಮನಗಂಡು ಕೇಂದ್ರ ಶಿಕ್ಷಣ ಮಂತ್ರಿ ಸ್ಥಾನಕ್ಕೆ ಕೊನೆಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಹೆಡ್‌ ಕೋಚ್ ಗೌತಮ್ ಗಂಭೀರ್ ರಾಜೀನಾಮೆ ಯಾವಾಗ ಎನ್ನುವಂತಹ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.

ಜೆನ್‌ಜಿಗಳ ಪ್ರತಿಭಟನೆಗೆ ಪ್ರಧಾನ್ ತಲೆದಂಡ:

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದೇಶಾದ್ಯಂತ ಜೆನ್‌ಜಿ ವಿದ್ಯಾರ್ಥಿಗಳು ತೀವ್ರವಾದ ಪ್ರತಿಭಟನೆ ಆರಂಭಿಸಿದ್ದರು. ದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಮುಂದುವರೆಸಿದ್ದರು. ಇದೀಗ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಶಿಕ್ಷಣ ಮಂತ್ರಿ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಜೋರಾಯ್ತು ಗಂಭೀರ್ ತಲೆದಂಡಕ್ಕೆ ಆಗ್ರಹ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಇದೀಗ ನೆಟ್ಟಿಗರು ಟೀಂ ಇಂಡಿಯಾ ಹೆಡ್‌ಕೋಚ್ ಗೌತಮ್ ಗಂಭೀರ್ ತಲೆದಂಡಕ್ಕೆ ಆಗ್ರಹಿಸಲು ಶುರುಮಾಡಿದ್ದಾರೆ. ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ, ಕ್ರಿಕೆಟ್ ಶಿಶು ಎಂದೇ ಕರೆಸಿಕೊಳ್ಳುವ ಐರ್ಲೆಂಡ್ ಎದುರು ಎರಡು ಪಂದ್ಯಗಳ ಟಿ20 ಸರಣಿಯಲ್ಲಿ ವೈಟ್‌ವಾಷ್ ಅನುಭವಿಸಿತ್ತು. ಇದಾದ ಬಳಿಕ ಇಂಗ್ಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಯಲ್ಲೂ ಟೀಂ ಇಂಡಿಯಾ 4-0 ಅಂತರದ ಮುಖಭಂಗ ಅನುಭವಿಸಿತ್ತು. ಇದಾದ ಬಳಿಕ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲೂ ಭಾರತ 1-2 ಅಂತರದ ಸೋಲು ಅನುಭವಿಸಿದೆ. ಈ ಎಲ್ಲಾ ಸೋಲುಗಳಿಗೆ ನೈತಿಕ ಹೊಣೆಹೊತ್ತು ಗೌತಮ್ ಗಂಭೀರ್ ಟೀಂ ಇಂಡಿಯಾ ಹೆಡ್‌ ಕೋಚ್ ಹುದ್ದೆಗೆ ಹಾಗೂ ಅಜಿತ್ ಅಗರ್ಕರ್ ತಮ್ಮ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಲು ಆಗ್ರಹಿಸಿದ್ದಾರೆ.

Scroll to load tweet…

Scroll to load tweet…