ಇಶಾನ್ ಕಿಶನ್, ಸೂರ್ಯಗಿಲ್ಲ ಸ್ಥಾನ; ಕಿಡಿಕಾರಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ..!
* ಲಂಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಸೂರ್ಯ, ಕಿಶನ್ಗಿಲ್ಲ ಸ್ಥಾನ
* ಉತ್ತಮ ಫಾರ್ಮ್ ಇದ್ದರೂ ತಂಡದಲ್ಲಿ ಕಿಶನ್, ಸೂರ್ಯಗಿಲ್ಲ ಸ್ಥಾನ
* ಟೀಂ ಇಂಡಿಯಾ ಆಯ್ಕೆಯನ್ನು ಪ್ರಶ್ನಿಸಿದ ಮೊಹಮ್ಮದ್ ಕೈಫ್
ಗುವಾಹಟಿ(ಜ.10): ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಮ್ಮ ಜತೆ ಶುಭ್ಮನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದರು.
ಇನ್ನು ಲಂಕಾ ಎದುರಿನ ಟಾಸ್ ಬೆನ್ನಲ್ಲೇ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮೊದಲ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯುತ್ತಿಲ್ಲ ಎನ್ನುವ ವಿಚಾರವನ್ನು ಖಚಿತಪಡಿಸಿದ್ದಾರೆ. ಇಶಾನ್ ಕಿಶನ್ ತಾನಾಡಿದ ಕೊನೆಯ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಸಿಡಿಲಬ್ಬರದ ದ್ವಿಶತಕ ಸಿಡಿಸಿ ಮಿಂಚಿದ್ದರು. ಇಂದಿಗೆ ಸರಿಯಾಗಿ ಒಂದು ತಿಂಗಳ ಹಿಂದಷ್ಟೇ ಬಾಂಗ್ಲಾದೇಶ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ದಾಖಲೆಯ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದರು. ಹೀಗಿದ್ದೂ ಇಶಾನ್ ಕಿಶನ್, ಲಂಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು.
ಇನ್ನು ಇನ್ನೊಂದೆಡೆ, ಟೀಂ ಇಂಡಿಯಾ ಪ್ರತಿಭಾನ್ವಿತ ಬ್ಯಾಟರ್ ಸೂರ್ಯಕುಮಾರ್ ಯಾದವ್, ಲಂಕಾ ಎದುರಿನ ಮೂರನೇ ಟಿ20 ಪಂದ್ಯದಲ್ಲಿ ಅಜೇಯ ಶತಕ ಸಿಡಿಸಿ ಮಿಂಚಿದ್ದರು. ಇದರ ಹೊರತಾಗಿಯೂ ಏಕದಿನ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಈ ಕುರಿತಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್, ಟೀಂ ಮ್ಯಾನೇಜ್ಮೆಂಟ್ ಕುರಿತಾಗಿ ಅಸಮಾಧಾನ ಹೊರಹಾಕಿದ್ದಾಳೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಮೊಹಮ್ಮದ್ ಕೈಫ್, "ಕಳೆದ ಏಕದಿನ ಪಂದ್ಯದಲ್ಲಿ ದ್ವಿಶತಕ ಚಚ್ಚಿದ್ದ ಇಶಾನ್ ಕಿಶನ್ ಹಾಗೂ ಕಳೆದ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ ಅವರಿಲ್ಲದ ಭಾರತ ತಂಡವನ್ನು ನೋಡುವುದಕ್ಕೆ ಸ್ವಲ್ಪ ಕಷ್ಟವಾಗುತ್ತದೆ. ಹೀಗಿದ್ದೂ ಅವರಿಬ್ಬರೂ ಸ್ಪೂರ್ತಿ ಕಳೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸವಿದೆ" ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಅವರನ್ನ ಲಂಕಾ ಎದುರಿನ ಮೊದಲ ಏಕದಿನ ಪಂದ್ಯದಿಂದ ಕೈಬಿಟ್ಟಿದ್ದಕ್ಕೆ ನೆಟ್ಟಿಗಳು ಟ್ರೋಲ್ ಮಾಡಿದ್ದಾರೆ.
ಮೊದಲ ಏಕದಿನ ಪಂದ್ಯಕ್ಕೆ ತಂಡಗಳು ಹೀಗಿವೆ ನೋಡಿ:
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್.
ಲಂಕಾ: ಕುಸಾಲ್ ಮೆಂಡಿಸ್(ವಿಕೆಟ್ ಕೀಪರ್), ಪಥುಮ್ ನಿಸ್ಸಾಂಕ, ಆವಿಷ್ಕಾ ಫರ್ನಾಂಡೋ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ದುನೀತ್ ವೆಲಲಗೆ, ಕುಸಾಲ್ ರಜಿತ, ದಿಲ್ಯಾನ್ ಮಧುಶಂಕ