ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ಭರ್ಜರಿ ಗೆಲುವು ಸಾಧಿಸಿದ ಭಾರತಪಾಕಿಸ್ತಾನ ಎದುರು ರೋಹಿತ್ ಶರ್ಮಾ ಪಡೆಗೆ 5 ವಿಕೆಟ್‌ಗಳ ಗೆಲುವುಟೀಂ ಇಂಡಿಯಾ ಪ್ರದರ್ಶನವನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

ದುಬೈ(ಆ.29): ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ನೆರೆಯ ಪಾಕಿಸ್ತಾನ ಎದುರು 5 ವಿಕೆಟ್‌ಗಳ ಅಂತರದ ರೋಚಕ ಜಯ ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮೂಲಕ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. 

Add Asianetnews Kannada as a Preferred SourcegooglePreferred

ಭಾರತ ಕ್ರಿಕೆಟ್ ತಂಡವಿಂದು ಏಷ್ಯಾಕಪ್ ಟೂರ್ನಿಯಲ್ಲಿ ಅದ್ಭುತ ಆಲ್ರೌಂಡ್‌ ಪ್ರದರ್ಶನ ತೋರಿತು. ಭಾರತ ತಂಡವು ಅತ್ಯುತ್ತಮ ಕೌಶಲ್ಯ ಮೆರೆಯಿತು. ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Scroll to load tweet…

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ತಂಡವು, ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಮಾರಕ ದಾಳಿಗೆ ತತ್ತರಿಸಿ ಕೇವಲ 147 ರನ್‌ಗಳಿಗೆ ಸರ್ವಪತನ ಕಂಡಿತು. ಪಾಕಿಸ್ತಾನ ಪರ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್‌ 43 ರನ್‌ ಗಳಿಸಿದ್ದೇ ಇನಿಂಗ್ಸ್‌ನ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿತು. ಇದನ್ನು ಹೊರತುಪಡಿಸಿ ಪಾಕಿಸ್ತಾನದ ಯಾವೊಬ್ಬ ಬ್ಯಾಟರ್ ಕೂಡಾ 30 ರನ್‌ ಗಡಿ ದಾಟಲು ಸಾಧ್ಯವಾಗಲಿಲ್ಲ. ಭಾರತ ಪರ ಭುವನೇಶ್ವರ್ ಕುಮಾರ್ 4 ವಿಕೆಟ್ ಉರುಳಿಸಿದರೇ, ಹಾರ್ದಿಕ್ ಪಾಂಡ್ಯ 3, ಆರ್ಶದೀಪ್ ಸಿಂಗ್ 2 ಹಾಗೂ ಆವೇಶ್ ಖಾನ್ ಒಂದು ವಿಕೆಟ್ ಪಡೆದರು.

ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಭಾರತ ತಂಡವು ಮೊದಲ ಓವರ್‌ನಲ್ಲೇ ಕೆ ಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತಾದರೂ, ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜೋಡಿ 49 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಆದರೆ ಈ ಇಬ್ಬರು ಬ್ಯಾಟರ್‌ಗಳನ್ನು ಬಲಿಪಡೆಯುವಲ್ಲಿ ಸ್ಪಿನ್ನರ್ ಮೊಹಮ್ಮದ್ ನವಾಜ್ ಯಶಸ್ವಿಯಾದರು. ಆದರೆ ಕೊನೆಯಲ್ಲಿ ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಸಮಯೋಚಿತ ಜತೆಯಾಟ ನಿಭಾಯಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯದರು. ಜಡೇಜಾ 35 ರನ್ ಬಾರಿಸಿ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರೇ, ಹಾರ್ದಿಕ್ ಪಾಂಡ್ಯ ಕೇವಲ 17 ಎಸೆತಗಳಲ್ಲಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇತ 33 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಬದ್ಧವೈರಿ ಪಾಕಿಸ್ತಾನ ಮಣಿಸಿದ ಟೀಂ ಇಂಡಿಯಾ, ಪಾಂಡ್ಯ ಸಿಕ್ಸರ್‌ಗೆ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು!

ಇನ್ನು ಕಾಂಗ್ರೆಸ್‌ ಯುವ ನಾಯಕ ರಾಹುಲ್ ಗಾಂಧಿ, ಎಂತಹ ರೋಚಕ ಪಂದ್ಯ..! ಚೆನ್ನಾಗಿ ಆಡಿತು ಟೀಂ ಇಂಡಿಯಾ. ಕ್ರೀಡೆ ದೇಶವನ್ನು ಒಗ್ಗೂಡುವಂತೆ ಪ್ರೇರೇಪಿಸುವ ರೀತಿಯೇ ಒಂದು ಸುಂದರ ಕ್ಷಣ. ಭಾರತದ ಪ್ರದರ್ಶನ ಸಂಭ್ರಮ ಹಾಗೂ ಹೆಮ್ಮೆಯನ್ನುಂಟು ಮಾಡಿತು ಎಂದು ಟ್ವೀಟ್ ಮಾಡಿದ್ದಾರೆ.

Scroll to load tweet…

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಟ್ವೀಟ್‌ ಮಾಡಿ ಭಾರತ ಕ್ರಿಕೆಟ್ ತಂಡದ ಪ್ರದರ್ಶನವನ್ನು ಸಂಭ್ರಮಿಸಿದ್ದಾರೆ. ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಅದ್ಭುತ ಆರಂಭವನ್ನೇ ಪಡೆದಿದೆ. ಇದೊಂದು ರೋಚಕತೆಯಿಂದ ಕೂಡಿದ್ದ ಪಂದ್ಯವೆನಿಸಿತು. ಅಭುತಪೂರ್ವ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Scroll to load tweet…