ಆಸ್ಟ್ರೇಲಿಯಾ ಪರ ಆಡಂ ಜಂಪಾ 14ನೇ ಓವರ್‌ ಬೌಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಇದಕ್ಕಿದ್ದಂತೆ ಪ್ಯಾಲೇಸ್ತೇನಿ ಬೆಂಬಲಿಗನೊಬ್ಬ ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ತಕ್ಷಣ ಜಾಗೃತರಾದ ಮೈದಾನದ ಸಿಬ್ಬಂದಿ ಆ ಅಭಿಮಾನಿಯನ್ನು ಮೈದಾನದಾಚೆ ಕಳಿಸುವಲ್ಲಿ ಯಶಸ್ವಿಯಾದರು.

ಅಹಮದಾಬಾದ್‌(ನ.19): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಡುತ್ತಿವೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿದೆಯಾದರೂ 100 ರನ್‌ಗಳೊಳಗಾಗಿ ಮೂರು ವಿಕೆಟ್ ಕಳೆದುಕೊಂಡು ಆತಂಕಕ್ಕೆ ಸಿಲುಕಿದೆ. ಹೀಗಿರುವಾಗಲೇ ಪ್ಯಾಲೇಸ್ತೇನಿ ಬೆಂಬಲಿಗನೊಬ್ಬ ಸ್ಟೇಡಿಯಂ ಭದ್ರತೆಯನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿರುವ ಘಟನೆ ನಡೆದಿದೆ.

ಹೌದು, ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ದೊಡ್ಡ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಕ್ರೀಸ್‌ಗಿಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ನಡೆಸಿದರೂ ಮತ್ತೊಂದು ತುದಿಯಲ್ಲಿ ಶುಭ್‌ಮನ್ ಗಿಲ್ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಗಿಲ್ ಕೇವಲ 4 ರನ್ ಗಳಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಎಂದಿನಂತೆ ಸ್ಪೋಟಕ ಆರಂಭ ಒದಗಿಸಿಕೊಟ್ಟ ನಾಯಕ ರೋಹಿತ್ ಶರ್ಮಾ ಕೇವಲ 31 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 47 ರನ್ ಗಳಿಸಿ ಮ್ಯಾಕ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಕಳೆದ 4 ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ತೋರಿದ್ದ ಶ್ರೇಯಸ್ ಅಯ್ಯರ್ ಕೇವಲ 4 ರನ್ ಗಳಿಸಿ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

Scroll to load tweet…

World Cup 2023 Final: ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡಕ್ಕೆ ಸಿಗುವ ಬಹುಮಾನದ ಮೊತ್ತವೆಷ್ಟು?

ಮೈದಾನಕ್ಕೆ ನುಗ್ಗಿದ ಪ್ಯಾಲೇಸ್ತೇನಿ ಬೆಂಬಲಿಗ: ಆಸ್ಟ್ರೇಲಿಯಾ ಪರ ಆಡಂ ಜಂಪಾ 14ನೇ ಓವರ್‌ ಬೌಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಇದಕ್ಕಿದ್ದಂತೆ ಪ್ಯಾಲೇಸ್ತೇನಿ ಬೆಂಬಲಿಗನೊಬ್ಬ ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ತಕ್ಷಣ ಜಾಗೃತರಾದ ಮೈದಾನದ ಸಿಬ್ಬಂದಿ ಆ ಅಭಿಮಾನಿಯನ್ನು ಮೈದಾನದಾಚೆ ಕಳಿಸುವಲ್ಲಿ ಯಶಸ್ವಿಯಾದರು. ಇದಾದ ಬಳಿಕ ಆ ಪ್ಯಾಲೇಸ್ತೇನಿ ಬೆಂಬಲಿಗನನ್ನು ಗುಜರಾತ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Scroll to load tweet…

ಕುಸಿದ ಭಾರತಕ್ಕೆ ಕೊಹ್ಲಿ-ರಾಹುಲ್ ಆಸರೆ: ಕೇವಲ 5 ರನ್ ಅಂತರದಲ್ಲಿ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಟೀಂ ಇಂಡಿಯಾಗೆ 4ನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಎಚ್ಚರಿಕೆಯ ಜತೆಯಾಟದ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಈ ಜೋಡಿ 22 ಓವರ್ ಅಂತ್ಯದ ವೇಳೆಗೆ 70 ಎಸೆತಗಳನ್ನು ಎದುರಿಸಿ ಮುರಿಯದ ಅಮೂಲ್ಯ 40 ರನ್‌ಗಳ ಜತೆಯಾಟವಾಡಿದೆ. ಸದ್ಯ ಭಾರತ 22 ಓವರ್ ಅಂತ್ಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 121 ರನ್ ಬಾರಿಸಿದ್ದು, ವಿರಾಟ್ ಕೊಹ್ಲಿ 42 ಹಾಗೂ ಕೆ ಎಲ್ ರಾಹುಲ್ 22 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.