ಐಪಿಎಲ್‌ನಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ರಾಜಸ್ಥಾನ ರಾಯಲ್ಸ್, ಗೆಲುವಿನ ಹಳಿಗೆ ಮರಳಲು ಯತ್ನಿಸುತ್ತಿರುವ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ಮುಖಾಮುಖಿಯಲ್ಲಿ ಮುಂಬೈ ಕೊಂಚ ಮೇಲುಗೈ ಸಾಧಿಸಿದ್ದು, ಯುವ ಆಟಗಾರ ವೈಭವ್‌ ಸೂರ್ಯವಂಶಿ ಮತ್ತು ಜಸ್‌ಪ್ರೀತ್‌ ಬೂಮ್ರಾ ನಡುವಿನ ಹಣಾಹಣಿ ಕುತೂಹಲ ಕೆರಳಿಸಿದೆ.

ಗುವಾಹಟಿ: ಈ ಬಾರಿ ಐಪಿಎಲ್‌ನಲ್ಲಿ ಹ್ಯಾಟ್ರಿಕ್‌ ಗೆಲುವಿನ ಕಾತರದಲ್ಲಿರುವ ರಾಜಸ್ಥಾನ ರಾಯಲ್ಸ್‌ ತಂಡ ಮಂಗಳವಾರ ಮುಂಬೈ ಇಂಡಿಯನ್ಸ್‌ ವಿರುದ್ಧ ಸೆಣಸಾಡಲಿದೆ. ಆರಂಭಿಕ ಪಂದ್ಯದಲ್ಲಿ ಗೆದ್ದಿದ್ದರೂ ಬಳಿಕ ಸೋಲು ಕಂಡಿರುವ ಮುಂಬೈ ತಂಡ ಗೆಲುವಿನ ಹಳಿಗೆ ಮರಳಲು ಕಾಯುತ್ತಿದೆ.

ಆಕ್ರಮಣಕಾರಿ ಆಟದ ಮೂಲಕ ಗುರುತಿಸಿಕೊಳ್ಳುತ್ತಿರುವ 15ರ ವೈಭವ್‌ ಸೂರ್ಯವಂಶಿ ಇದೇ ಮೊದಲ ಬಾರಿ ವೇಗಿ ಜಸ್‌ಪ್ರೀತ್‌ ಬೂಮ್ರಾ ವಿರುದ್ಧ ಆಡಲಿದ್ದು, ಅವರನ್ನು ಯಾವ ರೀತಿ ಎದುರಿಸಲಿದ್ದಾರೆ ಎಂಬ ಕುತೂಹಲವಿದೆ. ಇನ್ನು ಕಳೆದ ಪಂದ್ಯಕ್ಕೆ ಗೈರಾಗಿದ್ದ ಮುಂಬೈ ನಾಯಕ ಹಾರ್ದಿಕ್‌ ಪಾಂಡ್ಯ ಈ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಸಮತೋಲನ ಹೊಂದಿರುವ ರಾಯಲ್ಸ್‌ಗೆ ಮುಂಬೈ ಪ್ರಬಲ ಪೈಪೋಟಿ ನೀಡುವುದು ಖಚಿತ.

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಇದುವರೆಗೂ ಐಪಿಎಲ್‌ನಲ್ಲಿ 30 ಬಾರಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ಕೊಂಚ ಮೇಲುಗೈ ಸಾಧಿಸಿದೆ. 30 ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೇ ರಾಜಸ್ಥಾನ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು 2021ರಿಂದೀಚೆಗೆ 8 ಮುಖಾಮುಖಿಯ ಪೈಕಿ ರಾಜಸ್ಥಾನ ರಾಯಲ್ಸ್ ತಂಡವನ್ನು 8 ಬಾರಿ ಸೋಲಿಸುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ.

ಉಭಯ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ:

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯನ್ ರಿಕಲ್ಟನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಶೆರ್ಫಾನೆ ರುದರ್‌ಫೋರ್ಡ್, ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಮಯಾಂಕ್ ಮಾರ್ಕಂಡೆ.

ರಾಜಸ್ಥಾನ ರಾಯಲ್ಸ್:

ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್, ರಿಯಾನ್ ಪರಾಗ್(ನಾಯಕ), ಶಿಮ್ರೊನ್ ಹೆಟ್ಮೇಯರ್, ಡೊನಾವನ್ ಫೆರಾರಿಯಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ, ನಂದ್ರೆ ಬರ್ಗರ್, ರವಿ ಬಿಷ್ಣೋಯಿ.

ಪಂದ್ಯ: ಸಂಜೆ 7.30ಕ್ಕೆ

ಕೋಲ್ಕತಾ vs ಪಂಜಾಬ್‌ ಪಂದ್ಯ ಮಳೆಯಿಂದ ರದ್ದು

ಕೋಲ್ಕತಾ: ಸೋಮವಾರ ಇಲ್ಲಿನ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಐಪಿಎಲ್‌ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. ಹೀಗಾಗಿ ಉಭಯ ತಂಡಗಳೂ ತಲಾ 1 ಅಂಕ ಪಡೆದವು. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಬಹುತೇಕ ಖಚಿತವಾಗಿತ್ತು. 

ನಗರದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ, ಪಂದ್ಯ ನಿಗದಿತ ಸಮಯಕ್ಕೆ ಪ್ರಾರಂಭಗೊಂಡಿತು. ಆದರೆ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಕೆಕೆಆರ್‌ 3.4 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟದಲ್ಲಿ 34 ರನ್‌ ಗಳಿಸಿದ್ದಾಗ ಮಳೆ ಸುರಿಯಲಾರಂಭಿಸಿತು. ಆ ಬಳಿಕ 3 ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದ ಕಾರಣ ರಾತ್ರಿ 11 ಗಂಟೆ ವೇಳೆಗೆ ಪಂದ್ಯ ರದ್ದುಗೊಳಿಸಲಾಯಿತು.