ಜೈಪುರದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್, ಆರ್‍ಸಿಬಿ ವಿರುದ್ಧ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 173 ರನ್ ಗಳಿಸಿತು. ಯಶಸ್ವಿ ಜೈಸ್ವಾಲ್ 75 ರನ್ ಗಳಿಸಿ ಮಿಂಚಿದರು. ಆರ್‍ಸಿಬಿ ಪರ ಕೃನಾಲ್ ಪಾಂಡ್ಯ, ಯಶ್ ದಯಾಳ್, ಜೋಶ್ ಹೇಜಲ್‌ವುಡ್ ತಲಾ ಒಂದು ವಿಕೆಟ್ ಪಡೆದರು. ಆರ್‍ಸಿಬಿ ಗೆಲುವಿಗೆ ಸ್ಪರ್ಧಾತ್ಮಕ ಗುರಿ ನೀಡಲಾಗಿದೆ. (50 ಪದಗಳು)

ಜೈಪುರ: 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ಸವಾಲಿನ ಮೊತ್ತ ಕಲೆಹಾಕಿದೆ. ಯಶಸ್ವಿ ಜೈಸ್ವಾಲ್ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದ್ದು, ಆರ್‌ಸಿಬಿಗೆ ನಾಲ್ಕನೆ ಗೆಲುವು ದಾಖಲಿಸಲು ಸ್ಪರ್ಧಾತ್ಮಕ ಗುರಿ ನೀಡಿದೆ.

ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ವಿಕೆಟ್‌ಗೆ ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 6.5 ಓವರ್‌ಗಳಲ್ಲಿ 49 ರನ್‌ಗಳ ಜತೆಯಾಟವಾಡಿದರು. ನಾಯಕ ಸಂಜು ಸ್ಯಾಮ್ಸನ್ 19 ಎಸೆತಗಳನ್ನುಎದುರಿಸಿ 15 ರನ್ ಗಳಿಸಿ ಕೃನಾಲ್ ಪಾಂಡ್ಯಗೆ ವಿಕೆಟ್‌ ಒಪ್ಪಿಸಿದರು.

ಇನ್ನು ಇದಾದ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ಯಶಸ್ವಿ ಜೈಸ್ವಾಲ್ ಹಾಗೂ ರಿಯಾನ್ ಪರಾಗ್ ಎರಡನೇ ವಿಕೆಟ್‌ಗೆ 56 ರನ್‌ಗಳ ಜತೆಯಾಟವಾಡಿದರು. ರಿಯಾನ್ ಪರಾಗ್ 22 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 30 ರನ್ ಗಳಿಸಿ ಯಶ್ ದಯಾಳ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಯಶಸ್ವಿ ಜೈಸ್ವಾಲ್‌, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದರು. ಜೈಸ್ವಾಲ್ 47 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 75 ರನ್ ಗಳಿಸಿ ಜೋಶ್ ಹೇಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 

ಇನ್ನು ಪರಾಗ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಧೃವ್ ಜುರೆಲ್ ತಮಗೆ ಸಿಕ್ಕ ಜೀವದಾನ ಬಳಸಿಕೊಂಡು ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಧೃವ್ ಜುರೆಲ್ ಕೇವಲ 23 ಎಸೆತಗಳನ್ನು ಎದುರಿಸಿ ತಲಾ 2 ಬೌಂಡರಿ ಹಾಗೂ ಸಿಕ್ಸರ್ ಸಹಿತ 35 ರನ್ ಬಾರಿಸಿ ಅಜೇಯರಾಗುಳಿದರು.

ಆರ್‌ಸಿಬಿ ಶಿಸ್ತುಬದ್ದ ದಾಳಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳು ರಾಜಸ್ಥಾನ ಎದುರು ಶಿಸ್ತುಬದ್ದ ದಾಳಿ ನಡೆಸುವಲ್ಲಿ ಯಶಸ್ವಿಯಾದರು. ಆರ್‌ಸಿಬಿ ಪರ ಕೃನಾಲ್ ಪಾಂಡ್ಯ, ಯಶ್ ದಯಾಳ್, ಜೋಶ್ ಹೇಜಲ್‌ವುಡ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದೊಂದು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಸುಯಾಶ್ ಶರ್ಮಾ 4 ಓವರ್‌ನಲ್ಲಿ 39 ರನ್ ಬಿಟ್ಟುಕೊಟ್ಟು ಕೊಂಚ ದುಬಾರಿಯಾದರು.