ಐಪಿಎಲ್ ಕ್ವಾಲಿಫೈಯರ್-1 ಪಂದ್ಯದಲ್ಲಿ ಆರ್‌ಸಿಬಿ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಗೆದ್ದು ಫೈನಲ್‌ಗೇರಲು ಆರ್‌ಸಿಬಿ ತಂಡದಲ್ಲಿ ಒಂದು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಆರ್‌ಸಿಬಿ ಸಂಭಾವ್ಯ ತಂಡ ಹೇಗಿರಲಿದೆ ನೋಡೋಣ ಬನ್ನಿ.

RCB Possible Playing 11: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ಕ್ವಾಲಿಫೈಯರ್-1 ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಕಾಯ್ದುಕೊಂಡಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಹಿಮಾಚಲ ಪ್ರದೇಶದ HPCA ಸ್ಟೇಡಿಯಂ ಆತಿಥ್ಯ ವಹಿಸಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ನೇರವಾಗಿ ಫೈನಲ್‌ಗೆ ಲಗ್ಗೆಯಿಡಲಿದೆ. ಆರ್‌ಸಿಬಿ ತಂಡವು ಈ ಮಹತ್ವದ ಪಂದ್ಯದಲ್ಲಿ ಒಂದು ಮೇಜರ್ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

Add Asianetnews Kannada as a Preferred SourcegooglePreferred

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ನಂ.1 ಸ್ಥಾನಿಯಾಗಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಇದೀಗ ಕ್ವಾಲಿಫೈಯರ್-1 ಪಂದ್ಯವನ್ನು ಗೆದ್ದು ಸತತ ಎರಡನೇ ಬಾರಿಗೆ ಫೈನಲ್‌ಗೇರುವ ಲೆಕ್ಕಾಚಾರದಲ್ಲಿದೆ ಆರ್‌ಸಿಬಿ ತಂಡ. ಹೀಗಾಗಿ ಗುಜರಾತ್ ಎದುರು ಆರ್‌ಸಿಬಿಯ ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದನ್ನು ನೋಡೋಣ ಬನ್ನಿ

ಆರ್‌ಸಿಬಿ ತಂಡದಲ್ಲಿದ್ದಾರೆ ಇಬ್ಬರು ಸ್ಪೋಟಕ ಓಪನ್ನರ್ಸ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಬ್ಯಾಟಿಂಗ್‌ನಲ್ಲಿ ಉತ್ತಮ ಆರಂಭವನ್ನೇ ಒದಗಿಸಿಕೊಡುತ್ತಿದ್ದಾರೆ. ಜೇಕಬ್ ಬೆಥೆಲ್ ಅನುಪಸ್ಥಿತಿಯಲ್ಲಿ ವೆಂಕಟೇಶ್ ಅಯ್ಯರ್ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟಿದ್ದರು. ಆದರೆ ಇದೆಲ್ಲದರ ನಡುವೆ ಫಿಲ್ ಸಾಲ್ಟ್ ಸಂಪೂರ್ಣ ಫಿಟ್ ಆಗಿ ತಂಡ ಕೂಡಿಕೊಂಡಿರುವುದರಿಂದ ವಿರಾಟ್ ಕೊಹ್ಲಿ ಜತೆ ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎನಿಸಿದೆ. ಇದರ ಜತೆಗೆ ಈ ಪಂದ್ಯದಲ್ಲಿ ಫಿಲ್ ಸಾಲ್ಟ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ಕೂಡಾ ಹೆಗಲೇರಿದರೆ ಅಚ್ಚರಿಯೇನಿಲ್ಲ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಕೊಂಚ ಬದಲಾವಣೆ ಸಾಧ್ಯತೆ:

ಆರ್‌ಸಿಬಿ ತಂಡವು ಮಧ್ಯಮ ಕ್ರಮಾಂಕದಲ್ಲಿ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಇದೀಗ ಒಂದು ವೇಳೆ ಫಿಲ್ ಸಾಲ್ಟ್ ಆರಂಭಿಕರಾಗಿ ತಂಡ ಕೂಡಿಕೊಂಡರೇ, ಇನ್‌ಫಾರ್ಮ್‌ನಲ್ಲಿರುವ ವೆಂಕಟೇಶ್ ಅಯ್ಯರ್ ಮಧ್ಯಮ ಕ್ರಮಾಂಕಕ್ಕೆ ಸೇರಿಕೊಳ್ಳಬೇಕಾಗುತ್ತದೆ. ಹೀಗಾಗದಲ್ಲಿ ಅನಿವಾರ್ಯವಾಗಿ ಜಿತೇಶ್ ಶರ್ಮಾ ಅವರನ್ನು ಹೊರಗೆ ಕೂರಿಸಬೇಕಾಗುತ್ತದೆ. ಇನ್ನುಳಿದಂತೆ ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್ ಒಳ್ಳೆಯ ಲಯದಲ್ಲಿದ್ದಾರೆ. ಇನ್ನು ಟಿಮ್ ಡೇವಿಡ್ ಹಾಗೂ ವೆಂಕಟೇಶ್ ಅಯ್ಯರ್ ಕೂಡಾ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಒಳ್ಳೆಯ ಬಲ ತಂದು ಕೊಡಲಿದ್ದಾರೆ.

ಆರ್‌ಸಿಬಿ ತಂಡಕ್ಕಿದೆ ಇಬ್ಬರು ಸ್ಟಾರ್ ಆಲ್ರೌಂಡರ್ ಬಲ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಇಬ್ಬರು ಸ್ಟಾರ್ ಆಲ್ರೌಂಡರ್‌ಗಳಾದ ಕೃನಾಲ್ ಪಾಂಡ್ಯ ಹಾಗೂ ರೊಮ್ಯಾರಿಯೋ ಶೆಫರ್ಡ್ ಇದ್ದು, ಯಾವುದೇ ಕ್ಷಣದಲ್ಲಿ ಬೇಕಿದ್ದರೂ ತಮ್ಮ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಪಂದ್ಯದ ದಿಕ್ಕನ್ನೇ ಬದಲಿಸುವ ಕ್ಷಮತೆ ಹೊಂದಿದ್ದಾರೆ. ರೊಮ್ಯಾರಿಯೋ ಶೆಫರ್ಡ್ ಬ್ಯಾಟಿಂಗ್‌ನಲ್ಲಿ ಆರ್ಭಟಿಸಿದರೆ, ಎದುರಾಳಿ ಪಡೆಗೆ ಉಳಿಗಾಲವಿಲ್ಲ.

ಬೌಲಿಂಗ್‌ನಲ್ಲಿ ಯಾವುದೇ ಬದಲಾವಣೆಯಿಲ್ಲ:

ಇನ್ನು ಆರ್‌ಸಿಬಿ ಬೌಲಿಂಗ್ ಪಡೆಯು ಕಳೆದ ಪಂದ್ಯದಲ್ಲಿ ಕೊಂಚ ದುಬಾರಿಯಾಗಿತ್ತು. ಆದರೆ ಧರ್ಮಶಾಲಾದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಮ್ಯಾಚ್‌ನಲ್ಲಿ ಆರ್‌ಸಿಬಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಹೀಗಾಗಿ ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಸುಯಾಶ್ ಶರ್ಮಾ ಹಾಗೂ ರಸಿಕ್ ಸಲಂ ಧರ್ ಮತ್ತೊಮ್ಮೆ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ.

ಗುಜರಾತ್ ಟೈಟಾನ್ಸ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ:

ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್(ವಿಕೆಟ್ ಕೀಪರ್), ರಜತ್ ಪಾಟೀದಾರ್(ನಾಯಕ), ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮ್ಯಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ರಸಿಕ್ ಸಲಂ ಧರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್.