ಮುಂಬರುವ ಐಪಿಎಲ್ ಟೂರ್ನಿಯ ವೇಳೆಯಲ್ಲಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರನ್ನು ಸೆಳೆಯಲು ಆರ್‌ಸಿಬಿ ಫ್ರಾಂಚೈಸಿ ರಣತಂತ್ರ ಹೆಣೆಯುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನ ನಾವೆಲ್ಲರೂ ಮೆಗಾ ಹರಾಜಿಗೆ ಸಾಕ್ಷಿಯಾಗಲಿದ್ದೇವೆ. ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಹಲವು ತಂಡಗಳಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನು ಕೆಲವು ತಂಡಗಳಲ್ಲಿ ಹೊಸ ನಾಯಕರು ನೇಮಕವಾಗುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred

ಸದ್ಯದ ಮಟ್ಟಿಗೆ ಚೆನ್ನೈ ಸೂಪರ್ ಕಿಂಗ್ಸ್‌, ರಾಜಸ್ಥಾನ ರಾಯಲ್ಸ್, ಗುಜರಾತ್ ಟೈಟಾನ್ಸ್, ಕೋಲ್ಕತಾ ನೈಟ್ ರೈಡರ್ಸ್‌ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳಲ್ಲಿ ನಾಯಕರ ಬದಲಾವಣೆಯಾಗುವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಖನೌ ಸೂಪರ್ ಜೈಂಟ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳಲ್ಲಿ ಮುಂಬರುವ ಐಪಿಎಲ್‌ನಲ್ಲಿ ಹೊಸ ನಾಯಕ ನೇಮಕವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಈ ಎರಡು ಫ್ರಾಂಚೈಸಿಗಳು ಮುಂಬೈ ಇಂಡಿಯನ್ಸ್‌ ಮಾಡಿಕೊಳ್ಳುವ ರೀಟೈನ್ ಮೇಲೆ ಕಣ್ಣಿಟ್ಟಿದೆ.

IPL 2025 ಟೂರ್ನಿಗೂ ಮುನ್ನ ಲಖನೌಗೆ ಗುಡ್‌ಬೈ ಹೇಳ್ತಾರಾ ಕನ್ನಡಿಗ ಕೆ ಎಲ್ ರಾಹುಲ್..? ಈ ತಂಡ ಸೇರೋದು ಪಕ್ಕಾ..?

ಹೌದು, ಆರ್‌ಸಿಬಿ, ಲಖನೌ ಹಾಗೂ ಡೆಲ್ಲಿ ತಂಡಗಳಲ್ಲಿ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಹೊಸ ನಾಯಕರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಈ ಮೂರು ಫ್ರಾಂಚೈಸಿಗಳು, ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಯು ಯಾರನ್ನು ರೀಟೈನ್ ಮಾಡಿಕೊಳ್ಳಲಿದೆ ಎನ್ನುವುದು ಕಾಯುತ್ತಾ ಕುಳಿತಿವೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯುವ ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ರೋಹಿತ್ ಶರ್ಮಾ ಅವರನ್ನು ರೀಟೈನ್ ಮಾಡಿಕೊಳ್ಳಲಿದೆಯೇ ಅಥವಾ ನೂತನ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ರೀಟೈನ್ ಮಾಡಿಕೊಳ್ಳಲಿದೆಯೇ ಎನ್ನುವ ಕುತೂಹಲ ಜೋರಾಗಿದೆ.

ಇನ್ನು ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ರೀಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸದ್ಯ 35 ವರ್ಷದ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರಿಲೀಸ್ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ವಿಶ್ವಕಪ್ ಗೆದ್ದು ಮುಂಬೈನ ವಾಂಖೇಡೆ ಮೈದಾನಕ್ಕೆ ಬಂದಾಗ ಮುಂಬೈನ ಕ್ರಿಕೆಟ್ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಅವರನ್ನು ಹುರಿದುಂಬಿಸಿದ್ದರು. 

ಕೊಹ್ಲಿ, ರೋಹಿತ್ 2027ರ ಏಕದಿನ ವಿಶ್ವಕಪ್ ಆಡ್ತಾರಾ..?: ಮಹತ್ವದ ಅಪ್‌ಡೇಟ್ ಕೊಟ್ಟ ಗೌತಮ್ ಗಂಭೀರ್..!

ಕೆಲ ವರದಿಗಳ ಪ್ರಕಾರ ಒಂದು ವೇಳೆ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರಿಲೀಸ್ ಮಾಡಿದರೆ, ಆರ್‌ಸಿಬಿ ಹಾಗೂ ಲಖನೌ ಸೂಪರ್ ಜೈಂಟ್ಸ್‌ ಫ್ರಾಂಚೈಸಿಗಳು ತಮ್ಮ ತಂಡಕ್ಕೆ ಸೆಳೆದು ನಾಯಕತ್ವ ಪಟ್ಟ ಕಟ್ಟಲು ತುದಿಗಾಲಿನಲ್ಲಿ ನಿಂತಿವೆ ಎಂದು ವರದಿಯಾಗಿದೆ. ಒಂದು ವೇಳೆ ರೋಹಿತ್ ಶರ್ಮಾ, ಆರ್‌ಸಿಬಿ ತಂಡಕ್ಕೆ ಬಂದ ಮೇಲಾದರೂ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ? ಅಥವಾ ಹಿಟ್‌ಮ್ಯಾನ್ ಮುಂಬೈ ಇಂಡಿಯನ್ಸ್ ತಂಡದಲ್ಲಿಯೇ ಉಳಿದುಕೊಳ್ಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಇನ್ನೊಂದು ವರದಿಯ ಪ್ರಕಾರ ಕನ್ನಡಿಗ ಕೆ ಎಲ್ ರಾಹುಲ್, ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆದು ಆರ್‌ಸಿಬಿ ತೆಕ್ಕೆಗೆ ಸೇರಲಿದ್ದಾರೆ ಎಂದು ವರದಿಯಾಗಿದೆ.