ಅನುಭವಿ ವೇಗಿ ಮೊಹಮ್ಮದ್ ಶಮಿ ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಟೀಂ ಇಂಡಿಯಾಗೆ ಮರಳುವ ನಿರೀಕ್ಷೆಯಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಅವರನ್ನು ಪರಿಗಣಿಸುವ ಸಾಧ್ಯತೆಯಿದ್ದು, ಇದು 2027ರ ವಿಶ್ವಕಪ್ ಯೋಜನೆಗಳ ಭಾಗವಾಗಿರಬಹುದು ಎಂದು ವರದಿಯಾಗಿದೆ.

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಫಿಟ್ನೆಸ್, ಫಾರ್ಮ್ ಹಾಗೂ ಭವಿಷ್ಯದ ಕುರಿತಂತೆ ಗೊಂದಲದಲ್ಲಿರುವ 35 ವರ್ಷದ ಅನುಭವಿ ವೇಗಿ ಮೊಹಮ್ಮದ್ ಶಮಿ ಮತ್ತೊಮ್ಮೆ ಚರ್ಚೆಗೆ ಬಂದಿದ್ದಾರೆ. 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿರುವ ಶಮಿ ಇದೀಗ ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಯಲ್ಲಿ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ. ಸದ್ಯ ಶಮಿ ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದು, ಅವರ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದೆ ಎಂದು ವರದಿಯಾಗಿದೆ.

ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ, ಬಿಸಿಸಿಐ ಮೊಹಮ್ಮದ್ ಶಮಿ ಅವರ ಭವಿಷ್ಯದ ಕುರಿತಂತೆ ಪ್ಲಾನಿಂಗ್ ಮಾಡುತ್ತಿದೆ. ಆದರೆ ಶಮಿ ಅವರ ಫಿಟ್ನೆಸ್ ಕುರಿತಂತೆ ಈಗಲೂ ಬಿಸಿಸಿಐಗೆ ಭಯವಿದೆ. ಶಮಿ ಮತ್ತೆ ಗಾಯಗೊಂಡರೆ ಎನ್ನುವ ಆತಂಕ ಬಿಸಿಸಿಐ ಕಾಡುತ್ತಿದೆ. ಎಲ್ಲಾ ಅಂದುಕೊಂಡಂತೆ ಆದರೆ ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಮೊಹಮ್ಮದ್ ಶಮಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗಾದಲ್ಲಿ ಶಮಿ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಪ್ಲಾನಿಂಗ್‌ನಲ್ಲಿ ಇರಲಿದ್ದಾರೆ.

ಸಾಕಷ್ಟು ಸಮಯದಿಂದ ಭಾರತ ತಂಡದಿಂದ ಹೊರಗುಳಿದಿರುವ ಶಮಿ:

2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಮಾರಕ ದಾಳಿ ನಡೆಸುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಮೊಹಮ್ಮದ್ ಶಮಿ ಪ್ರಮುಖ ಪಾತ್ರ ವಹಿಸಿದ್ದರು. ಆ ಟೂರ್ನಿಯಲ್ಲಿ ಶಮಿ 9 ವಿಕೆಟ್ ಕಬಳಿಸುವ ಮೂಲಕ ಭಾರತ ಪರ ಅತಿಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು. ಶಮಿ ಅದೇ ಟೂರ್ನಿಯಲ್ಲಿ ನ್ಯೂಜಿಲೆಂಡ್ ಎದುರು ಕೊನೆಯ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಶಮಿ ಭಾರತ ಪರ ಯಾವುದೇ ಪಂದ್ಯಗಳನ್ನಾಡಿಲ್ಲ. ಸಾಕಷ್ಟು ಸಮಯದಿಂದ ಭಾರತ ತಂಡದಿಂದ ಹೊರಗುಳಿದಿರುವ ಶಮಿ, ಇದೀಗ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ.

ತವರು ಮೈದಾನದಲ್ಲಿ ಅದ್ಭುತ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಶಮಿ:

ಅನುಣವಿ ವೇಗಿ ಮೊಹಮ್ಮದ್ ಶಮಿ ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾ ಬಾಗಿಲು ಬಡಿಯಲಾರಂಭಿಸಿದ್ದಾರೆ. ಶಮಿ ಕಳೆದ 6 ಪಂದ್ಯಗಳಿಂದ 17 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪೈಕಿ ಮೂರು ವಿಜಯ್ ಹಜಾರೆ ಟ್ರೋಫಿ ಹಾಗೂ ಮೂರು ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಪಂದ್ಯಗಳು ಸೇರಿದೆ. ಇದಷ್ಟೇ ಅಲ್ಲದೇ ಶಮಿ ರಣಜಿ ಟ್ರೋಫಿ ಟೂರ್ನಿಯಲ್ಲಿ ಬಂಗಾಳ ಪರ ಕೇವಲ 4 ಪಂದ್ಯಗಳನ್ನಾಡಿ 20 ವಿಕೆಟ್ ಕಬಳಿಸಿ ಮಿಂಚಿದ್ದರು.

ಬುಮ್ರಾಗೆ ರೆಸ್ಟ್, ಶಮಿಗೆ ಚಾನ್ಸ್?

ಇನ್ನು ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ. ಹೀಗಾಗಿ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಆಯ್ಕೆ ಸಮಿತಿ ಮಣೆ ಹಾಕುವ ಸಾಧ್ಯತೆಯಿದೆ ಎಂದು ವರದಿಯಾಗುತ್ತಿದೆ. ಇದಷ್ಟೇ ಅಲ್ಲದೇ ಹಲವು ಮಾಜಿ ಕ್ರಿಕೆಟಿಗರು ಶಮಿ ಯಾಕೆ ಆಯ್ಕೆಯಾಗುತ್ತಿಲ್ಲ ಎಂದು ಬಿಸಿಸಿಐ ಅನ್ನು ಪ್ರಶ್ನಿಸುತ್ತಿದೆ. ಐಸಿಸಿ ಟೂರ್ನಿಗಳಲ್ಲಿ ಭಾರತ ಪರ ಅತಿಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿರುವ ಶಮಿ, ಕಿವೀಸ್ ಎದುರಿನ ಏಕದಿನ ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.