ಇಂಗ್ಲೆಂಡ್‌ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್‌ ಅಯ್ಯರ್ ಏಪ್ರಿಲ್ 08ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮುಂಬೈ(ಏ.03): ಭಾರತದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಏಪ್ರಿಲ್‌ 8ರಂದು ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. 

Add Asianetnews Kannada as a Preferred SourcegooglePreferred

ಪುಣೆಯಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ವೇಳೆ ಶ್ರೇಯಸ್‌ ಗಾಯಗೊಂಡಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳಲು ಕನಿಷ್ಠ 4 ತಿಂಗಳ ಸಮಯ ಬೇಕಿದೆ ಎನ್ನಲಾಗಿದೆ. 14ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿರುವ ಶ್ರೇಯಸ್‌, ಇಂಗ್ಲೆಂಡ್‌ ಕೌಂಟಿ ತಂಡ ಲಂಕಾಷೈರ್‌ ಪರ ರಾಯಲ್‌ ಲಂಡನ್‌ ಏಕದಿನ ಟೂರ್ನಿಗೂ ಅಲಭ್ಯರಾಗಲಿದ್ದಾರೆ.

26 ವರ್ಷದ ಶ್ರೇಯಸ್‌ ಅಯ್ಯರ್, 4 ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದು, ಭಾರತದಲ್ಲೇ ಅಕ್ಟೋಬರ್‌ ಹಾಗೂ ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ವೇಳೆಗೆ ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ.

ಸೆಪ್ಟೆಂಬರ್‌ ವರೆಗೂ ಶ್ರೇಯಸ್‌ ಅಯ್ಯರ್‌ ಕ್ರಿಕೆಟಿಂದ ದೂರ?

ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚೊಚ್ಚಲ ಬಾರಿಗೆ ಐಪಿಎಲ್ ಫೈನಲ್‌ ಪ್ರವೇಶಿಸಿತ್ತು. ಆದರೆ ಪ್ರಶಸ್ತಿ ಸುತ್ತಿನಲ್ಲಿ ಡೆಲ್ಲಿಗೆ ಶರಣಾಗುವ ಮೂಲಕ ಕಪ್‌ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಇನ್ನು 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಶ್ರೇಯಸ್‌ ಅನುಪಸ್ಥಿತಿಯಲ್ಲಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ.