Rahul Dravid :ಟೀಂ ಇಂಡಿಯಾ ಹೆಡ್ ಕೋಚ್ ದ್ರಾವಿಡ್ಗೆ ಕೋವಿಡ್ ದೃಢ..! ಏಷ್ಯಾಕಪ್ಗೆ ಅನುಮಾನ..!
* ಏಷ್ಯಾಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ಶಾಕ್
* ಟೀಂ ಇಂಡಿಯಾ ಹೆಡ್ ಕೋಚ್ಗೆ ಕೋವಿಡ್ 19 ಸೋಂಕು ದೃಢ
* ಏಷ್ಯಾಕಪ್ ಟೂರ್ನಿಗೆ ರಾಹುಲ್ ದ್ರಾವಿಡ್ ಪಾಲ್ಗೊಳ್ಳುವುದು ಅನುಮಾನ
ಬೆಂಗಳೂರು(ಆ.23): ಏಷ್ಯಾಕಪ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳ ಬಾಕಿ ಇರುವಾಗಲೇ ಟಿಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಜಂಬಾಬ್ವೆ ಎದುರಿನ ಪ್ರವಾಸದಿಂದ ರಾಹುಲ್ ಹಿಂದೆ ಸರಿದಿದ್ದರು. ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶನದಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ 3-0 ಅಂತರದಲ್ಲಿ ಜಿಂಬಾಬ್ವೆ ಎದುರಿನ ಏಕದಿನ ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿ ಬೀಗಿತ್ತು. ಏಷ್ಯಾಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಹೆಡ್ ಕೋಚ್ ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ ವಿಕ್ರಂ ರಾಥೋಡ್ ಹಾಗೂ ಬೌಲಿಂಗ್ ಕೋಚ್ ಪರಾಸ್ ಮಹಾಂಬ್ರೆ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾ, ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಮೊದಲು ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದುಬೈ ಮೈದಾನದಲ್ಲಿಯೇ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತ ಎದುರು ಪಾಕಿಸ್ತಾನ ತಂಡವು 10 ವಿಕೆಟ್ಗಳ ಅಂತರದ ಗೆಲುವು ದಾಖಲಿಸಿತ್ತು. ಇದೀಗ ಒಂದು ವರ್ಷದ ಬಳಿಕ ಮತ್ತೊಮ್ಮೆ ಉಭಯ ತಂಡಗಳ ಮುಖಾಮುಖಿಗೆ ಕ್ಷಣಗಣನೆ ಆರಂಭವಾಗಿದೆ.
ICC T20 World Cup 2022: ಸೆಪ್ಟೆಂಬರ್ 15ಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟ..!
ಕೋವಿಡ್ 19 ಸೋಂಕಿಗೆ ಒಳಗಾಗಿರುವ ರಾಹುಲ್ ದ್ರಾವಿಡ್, ಪಾಕಿಸ್ತಾನ ಎದುರಿನ ಹೈವೋಲ್ಟೇಜ್ ಪಂದ್ಯದ ವೇಳೆಗೆ ತಂಡ ಕೂಡಿಕೊಳ್ಳುತ್ತಾರೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಆದರೆ ಬಿಸಿಸಿಐ ವೈದ್ಯಕೀಯ ಸಿಬ್ಬಂದಿಯು ಗ್ರೀನ್ ಸಿಗ್ನಲ್ ನೀಡದ ಬಳಿಕವಷ್ಟೇ ರಾಹುಲ್ ದ್ರಾವಿಡ್, ದುಬೈಗೆ ಹಾರಲಿದ್ದಾರೆ ಎಂದು ಇಂಡಿಯಾಟುಡೆ.ಇನ್ ವೆಬ್ಸೈಟ್ ವರದಿ ಮಾಡಿದೆ.