ಖಾಲಿ ಕ್ರೀಡಾಂಗಣಗಳಲ್ಲಿ ಕ್ರಿಕೆಟ್ ಆಯೋಜನೆ: ತುಟಿ ಬಿಚ್ಚಿದ ಕೊಹ್ಲಿ
ಕೊರೋನಾ ವೈರಸ್ನಿಂದಾಗಿ ಕ್ರೀಡಾಚಟುವಟಿಕೆಗಳು ಸ್ತಬ್ಧವಾಗಿವೆ. ಹೀಗಿರುವಾಗಲೇ ಪ್ರೇಕ್ಷಕರಿಲ್ಲದೇ ಖಾಲಿ ಮೈದಾನದಲ್ಲಿ ಕ್ರಿಕೆಟ್ ಆಯೋಜನೆಯ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಹೀಗಿರುವಾಗಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ತುಟಿ ಬಿಚ್ಚಿದ್ದಾರೆ.
ನವದೆಹಲಿ(ಮೇ.09): ಖಾಲಿ ಕ್ರೀಡಾಂಗಣಗಳಲ್ಲಿ ಕ್ರಿಕೆಟ್ ನಡೆಸುವ ಚಿಂತನೆಯನ್ನು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬೆಂಬಲಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕ್ರಿಕೆಟ್ ಚಟುವಟಿಕೆ ಸ್ಥಗಿತಗೊಂಡಿದ್ದು, ಪರಿಸ್ಥಿತಿ ಸುಧಾರಿಸಿದ ಬಳಿಕ ಪಂದ್ಯಗಳನ್ನು ನಡೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
‘ ಅಭಿಮಾನಿಗಳಿಲ್ಲದೆ ಅಡುವುದು ಕಷ್ಟ. ಕ್ರಿಕೆಟ್ ತನ್ನ ಜಾದೂ ಕಳೆದುಕೊಳ್ಳಲಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದೇ ಸೂಕ್ತ’ ಎಂದು ಕೊಹ್ಲಿ ಹೇಳಿದ್ದಾರೆ. ಟಿ20 ವಿಶ್ವಕಪ್ ಆಯೋಜನೆಗೆ ಹಸಿರು ನಿಶಾನೆ ದೊರೆಯಬೇಕಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲ ತಿಂಗಳಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆರಂಭಿಸಬೇಕಾದ ಅನಿವಾರ್ಯತೆ ಎಲ್ಲಾ ತಂಡಗಳಿಗೂ ಇದೆ. ಹೀಗಾಗಿ, ಖಾಲಿ ಕ್ರೀಡಾಂಗಣಗಳಲ್ಲಿ ಪಂದ್ಯ ನಡೆಸಲು ಬಹುತೇಕ ಎಲ್ಲಾ ರಾಷ್ಟ್ರಗಳ ಕ್ರಿಕೆಟಿಗರು ಒಲವು ತೋರಿದ್ದಾರೆ.
ಧೋನಿ, ಕೊಹ್ಲಿಗಿಂತ ಸೌರವ್ ಗಂಗೂಲಿ ನಾಯಕತ್ವವೇ ಬೆಸ್ಟ್; ನೆಹ್ರಾ ಹೇಳಿದ್ರು ಕಾರಣ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊರೋನಾ ಸಂಕಷ್ಟಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಇದರ ಜೊತೆಗೆ ಅಭಿಮಾನಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಲೇ ಬಂದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲೇ ಮನೆಯಲ್ಲೇ ಇರಿ ಎಂದು ಜನರಲ್ಲಿ ಕೈಮುಗಿದು ಕೇಳಿಕೊಂಡಿದ್ದಾರೆ.
ಜಗತ್ತಿನಾದ್ಯಂತ ಕೊರೋನಾದಿಂದಾಗಿ ಜನಜೀವನ ಮಾತ್ರವಲ್ಲದೇ ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿವೆ. ಈ ವರ್ಷದ ಜುಲೈನಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ಈಗಾಗಲೇ ಒಂದು ವರ್ಷ ಮುಂದೂಡಲ್ಪಟ್ಟಿದೆ. ಇನ್ನು ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯಾದ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡಾ ಒಂದು ವರ್ಷಕ್ಕೆ ಮುಂದೂಡಲ್ಪಟ್ಟಿದೆ.