ಪುಣೆ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಬೆನ್ನಲ್ಲೇ ಆರ್‌ಸಿಬಿ ಮಾಜಿ ಕ್ರಿಕೆಟಿಗ ವಿರಾಟ್‌ಗೆ ಕಿವಿಮಾತು ಹೇಳಿದ್ದಾರೆ

ಪುಣೆ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದಾರೆ. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಅವರ ಮೇಲೆ ಹಲವು ಕ್ರಿಕೆಟ್ ಪಂಡಿತರು ಅನೇಕ ಸಲಹೆಗಳನ್ನು ನೀಡಲಾರಂಭಿಸಿದ್ದಾರೆ. ಇದೀಗ ಆರ್‌ಸಿಬಿ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಕೂಡಾ ವಿರಾಟ್ ಕೊಹ್ಲಿ, ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಮೂಲಕ ರೆಡ್ ಬಾಲ್‌ ಕ್ರಿಕೆಟ್‌ನಲ್ಲಿ ಫಾರ್ಮ್ ಕಂಡುಕೊಳ್ಳಲಿ ಎನ್ನುವ ಸಲಹೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯ ಸುತ್ತಿದ್ದ ಕೊಹ್ಲಿ, ಎರಡನೇ ಇನ್ನಿಂಗ್ಸ್‌ನಲ್ಲಿ 70 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಕೊಹ್ಲಿ ಕ್ರಮವಾಗಿ 1 ಹಾಗೂ 17 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಕೊಹ್ಲಿ ಸೇರಿದಂತೆ ಬಹುತೇಕ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಟೀಂ ಇಂಡಿಯಾ ಬರೋಬ್ಬರಿ 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತು ಮುಖಭಂಗ ಅನುಭವಿಸಿದೆ. ಪುಣೆ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲೂ ವಿರಾಟ್ ಕೊಹ್ಲಿ, ಮಿಚೆಲ್ ಸ್ಯಾಂಟ್ನರ್‌ಗೆ ವಿಕೆಟ್ ಒಪ್ಪಿಸಿದ್ದರು.

ಪ್ರಾಕ್ಟೀಸ್‌ ಆಯ್ಕೆಯಲ್ಲ, ಕಡ್ಡಾಯ: 2 ಸೋಲಿನ ಬಳಿಕ ಭಾರತ ಆಟಗಾರರಿಗೆ ಬಿಸಿಸಿಐ ಖಡಕ್‌ ಸೂಚನೆ

"ವಿರಾಟ್ ಕೊಹ್ಲಿ ಸರಾಗವಾಗಿ ರನ್ ಗಳಿಸಲು ಸಾಧ್ಯವಾಗುತ್ತಿಲ್ಲ. ಈ ಸರಣಿ ಅವರ ಪಾಲಿಗೆ ತೃಪ್ತಿಕರವಾಗಿಲ್ಲ. ಆಡಿದ ನಾಲ್ಕು ಇನ್ನಿಂಗ್ಸ್‌ಗಳ ಪೈಕಿ ಮೂರು ಇನ್ನಿಂಗ್ಸ್‌ಗಳಲ್ಲಿ ನಿರಾಸೆ ಅನುಭವಿಸಿದ್ದಾರೆ. ಅವರು ತಾವು ಎಲ್ಲಿ ಸ್ಪಿನ್ನರ್‌ಗಳಿಗೆ ವಿಕೆಟ್ ಒಪ್ಪಿಸುತ್ತಿದ್ದೇನೆ ಎನ್ನುವುದನ್ನು ಆದಷ್ಟು ಬೇಗ ಕಂಡು ಕೊಳ್ಳಬೇಕಿದೆ. ಅದಕ್ಕಾಗಿ ಅವರು ದೇಶಿ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಿದೆ. ಅವರು ಯಾವಾಗಲೂ ಸಮಸ್ಯೆ ಎದುರಾದಾಗ ಪರಿಹಾರ ಕಂಡುಕೊಳ್ಳುವ ವಿಚಾರದಲ್ಲಿ ಮುಂದಿರುವಂತಹ ವ್ಯಕ್ತಿ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಮೆಗಾ ಹರಾಜಿಗೆ ಕಾಯುತ್ತಿರುವ ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್!

ವಿರಾಟ್ ಕೊಹ್ಲಿ 2021ರಿಂದೀಚೆಗೆ 50 ಇನ್ನಿಂಗ್ಸ್‌ಗಳನ್ನಾಡಿದ್ದು, ಈ ಪೈಕಿ 24 ಬಾರಿ ಸ್ಪಿನ್ನರ್‌ಗಳಿಗೆ ವಿಕೆಟ್ ಒಪ್ಪಿಸಿದ್ದಾರೆ. ವಿರಾಟ್ ಕೊಹ್ಲಿ 2023ರ ಜುಲೈನಲ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು. 29ನೇ ಟೆಸ್ಟ್ ಶತಕದ ಬಳಿಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಮೂರಂಕಿ ಮೊತ್ತ ದಾಖಲಿಸಲು ರೆಡ್ ಬಾಲ್‌ ಕ್ರಿಕೆಟ್‌ನಲ್ಲಿ ಇದುವರೆಗೂ ಸಾಧ್ಯವಾಗಿಲ್ಲ.