Ind vs SA: ದೀಪಕ್ ಚಹರ್ ಬದಲಿಗೆ ಟೀಂ ಇಂಡಿಯಾ ಕೂಡಿಕೊಂಡ ವಾಷಿಂಗ್ಟನ್ ಸುಂದರ್..!
ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದ ದೀಪಕ್ ಚಹರ್
ದೀಪಕ್ ಚಹರ್ ಬದಲಿಗೆ ವಾಷಿಂಗ್ಟನ್ ಸುಂದರ್ಗೆ ಒಲಿದ ಸ್ಥಾನ
3 ಪಂದ್ಯಗಳ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-0 ಮುನ್ನಡೆ
ರಾಂಚಿ(ಅ.08): ಬೆನ್ನು ನೋವಿನ ಸಮಸ್ಯೆ ಹಾಗೂ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಟೀಂ ಇಂಡಿಯಾ ಆಲ್ರೌಂಡರ್ ದೀಪಕ್ ಚಹರ್, ದಕ್ಷಿಣ ಆಫ್ರಿಕಾ ವಿರುದ್ದದ ಎರಡು ಹಾಗೂ ಮೂರನೇ ಏಕದಿನ ಪಂದ್ಯಗಳ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಮತ್ತೋರ್ವ ಆಲ್ರೌಂಡರ್ ವಾಷಿಂಗ್ಟನ್ ಸುಂದರ್, ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಂಡಿದ್ದಾರೆ.
ಸ್ವಿಂಗ್ ಸ್ಪೆಷಲಿಸ್ಟ್ ದೀಪಕ್ ಚಹರ್, ದಕ್ಷಿಣ ಆಫ್ರಿಕಾ ವಿರುದ್ದದ ಮೂರನೇ ಟಿ20 ಪಂದ್ಯ ಆಡುವ ವೇಳೆ ಬೆನ್ನಿನ ಸೆಳೆತಕ್ಕೆ ಒಳಗಾಗಿದ್ದರು. ಇದೀಗ ಶನಿವಾರ ಬಿಸಿಸಿಐ ಪ್ರಕಟಣೆ ಹೊರಡಿಸಿದ್ದು, ದೀಪಕ್ ಚಹರ್, ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ವರದಿ ಮಾಡಿಕೊಳ್ಳಲಿದ್ದು, ಅವರನ್ನು ವೈದ್ಯಕೀಯ ಸಿಬ್ಬಂದಿ ಸೂಕ್ತ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದೆ. ಬೆನ್ನು ನೋವಿನ ಸೆಳೆತದಿಂದಾಗಿಯೇ ದೀಪಕ್ ಚಹರ್, ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲೂ ಕಣಕ್ಕಿಳಿದಿರಲಿಲ್ಲ.
ದೀಪಕ್ ಚಹರ್, ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದರು. ಇದೀಗ ದೀಪಕ್ ಚಹರ್ ಫಿಟ್ನೆಸ್ ಸಮಸ್ಯೆ, ಟೀಂ ಇಂಡಿಯಾ ಪಾಳಯದಲ್ಲಿ ಕೊಂಚ ಆತಂಕಕ್ಕೆ ಈಡು ಮಾಡಿಕೊಟ್ಟಿದೆ. ಆದರೆ ದೀಪಕ್ ಚಹರ್ ಆದಷ್ಟು ಬೇಗ ಪಿಟ್ನೆಸ್ ಗಳಿಸಿಕೊಳ್ಳಲಿದ್ದಾರೆ ಎನ್ನವ ವಿಶ್ವಾಸವನ್ನು ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ವ್ಯಕ್ತಪಡಿಸಿದೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಬೆನ್ನು ನೋವಿನ ಸಮಸ್ಯೆಯಿಂದಾಗಿ ಜಸ್ಪ್ರೀತ್ ಬುಮ್ರಾ, ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ದೀಪಕ್ ಚಹರ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ದೀಪಕ್ ಚಹರ್ ಕೂಡಾ ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವುದು ಭಾರತದ ಪಾಲಿಗೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.
T20 World Cup ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ಮತ್ತೊಂದು ಶಾಕ್..! ಮತ್ತೋರ್ವ ಸ್ಟಾರ್ ವೇಗಿನೂ ಡೌಟ್?
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬಾರಿಸಿದ ಆಕರ್ಷಕ ಅರ್ಧಶತಕದ ಹೊರತಾಗಿಯೂ, ದಕ್ಷಿಣ ಆಫ್ರಿಕಾ ತಂಡವು 9 ರನ್ಗಳ ರೋಚಕ ಗೆಲುವು ಸಾಧಿಸಿತ್ತು. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಹರಿಣಗಳ ಪಡೆ 1-0 ಮುನ್ನಡೆ ಸಾಧಿಸಿದೆ. ಇದೀಗ ದೀಪಕ್ ಚಹರ್ ಅನುಪಸ್ಥಿತಿಯಲ್ಲಿ ಶಾರ್ದೂಲ್ ಠಾಕೂರ್, ಆವೇಶ್ ಖಾನ್ ಹಾಗೂ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾ ವೇಗದ ಬೌಲಿಂಗ್ ಜವಾಬ್ದಾರಿಯನ್ನು ಹೊರಬೇಕಿದೆ.
ದಕ್ಷಿಣ ಆಫ್ರಿಕಾ ಎದುರಿನ ಉಳಿದೆರಡು ಏಕದಿನ ಪಂದ್ಯಕ್ಕೆ ಭಾರತ ತಂಡ ಹೀಗಿದೆ ನೋಡಿ:
ಶಿಖರ್ ಧವನ್(ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್(ಉಪನಾಯಕ), ರಜತ್ ಪಾಟೀದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್(ವಿಕೆಟ್ ಕೀಪರ್). ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಶಹಬಾಜ್ ಅಹಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ, ಮುಕೇಶ್ ಕುಮಾರ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.