Asianet Suvarna News Asianet Suvarna News

ಯಾರು ಟೀಂ ಇಂಡಿಯಾವನ್ನು ಸೋಲಿಸ್ತಾರೋ ಅವರೇ 2023ರ ವಿಶ್ವಕಪ್ ಗೆಲ್ತಾರೆ: ಇಂಗ್ಲೆಂಡ್ ಮಾಜಿ ನಾಯಕನ ಭವಿಷ್ಯ

ಅಸ್ಟ್ರೇಲಿಯಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ನಿಗದಿತ 50 ಓವರ್‌ಗಳಲ್ಲಿ ಕೇವಲ 5 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತು. ಇಲ್ಲಿನ ಹೋಳ್ಕರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಡೆಕ್ವರ್ಥ್ ಲೂಯಿಸ್ ನಿಯಮದನ್ವಯ 99 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು. 

Whoever beat India will win World Cup 2023 Says Michael Vaughan kvn
Author
First Published Sep 25, 2023, 5:41 PM IST

ಇಂದೋರ್(ಸೆ.25): ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಲಿದ್ದು, ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದೆ. ಸದ್ಯ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯ ಪೈಕಿ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವುದರ ಜತೆಗೆ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಹೀಗಿರುವಾಗಲೇ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್, ಯಾವ ತಂಡವು ಟೀಂ ಇಂಡಿಯಾವನ್ನು ಸೋಲಿಸಲಿದೆಯೋ ಆ ತಂಡ 2023ರ ಏಕದಿನ ವಿಶ್ವಕಪ್ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಸ್ಟ್ರೇಲಿಯಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ನಿಗದಿತ 50 ಓವರ್‌ಗಳಲ್ಲಿ ಕೇವಲ 5 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತು. ಇಲ್ಲಿನ ಹೋಳ್ಕರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಡೆಕ್ವರ್ಥ್ ಲೂಯಿಸ್ ನಿಯಮದನ್ವಯ 99 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು. 

ಟೀಂ ಇಂಡಿಯಾ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಮೈಕಲ್ ವಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶುಭ್‌ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಇಬ್ಬರೂ ಶತಕ ಬಾರಿಸಿದರೆ, ಕೆ ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬಾರಿಸಿದ ಚುರುಕಿನ ಅರ್ಧಶತಕಗಳು ತಂಡವನ್ನು 400ರ ಸಮೀಪ ಕೊಂಡೊಯ್ಯಿತು.

'ಎಂತ ಹೊಡೆತ..!': ಗಿಲ್ ಬ್ಯಾಟಿಂಗ್‌ಗೆ ತೆಂಡುಲ್ಕರ್ ಪುತ್ರಿ ಸಾರಾ ದಿಲ್ ಖುಷ್..!

ಈ ಕುರಿತಂತೆ ಟ್ವೀಟ್ ಮಾಡಿದ ಮೈಕಲ್ ವಾನ್, "ನನಗಂತೂ ಒಂದು ವಿಚಾರ ತುಂಬಾ ಸ್ಪಷ್ಟವಾಗಿದೆ. ಯಾರು ಭಾರತ ತಂಡವನ್ನು ಸೋಲಿಸುತ್ತಾರೋ ಅವರೇ ಈ ಬಾರಿ ವಿಶ್ವಕಪ್ ಗೆಲ್ಲುತ್ತಾರೆ. ಭಾರತದ ಬ್ಯಾಟಿಂಗ್ ವಿಭಾಗ, ಭಾರತದ ಪಿಚ್‌ನಲ್ಲಂತೂ ಅಮೋಘವಾಗಿದೆ. ಇದರ ಜತೆಗೆ ಭಾರತ ತಂಡದಲ್ಲಿ ಎಲ್ಲಾ ರೀತಿಯ ಬೌಲಿಂಗ್ ಆಯ್ಕೆಗಳು ಇವೆ. ಒತ್ತಡವನ್ನು ಎದುರಿಸುವ ವಿಚಾರದಲ್ಲಿ ತಂಡಕ್ಕೆ ಸವಾಲಾಗಬಹುದು" ಎಂದು ಇಂಗ್ಲೆಂಡ್ ಮಾಜಿ ನಾಯಕ ಅಭಿಪ್ರಾಯಪಟ್ಟಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ, ಆರಂಭದಲ್ಲೇ ಋತುರಾಜ್ ಗಾಯಕ್ವಾಡ್ ವಿಕೆಟ್ ಕಳೆದುಕೊಂಡಿತು. ಆದರೆ ಇದಾದ ಬಳಿಕ ಎರಡನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ ಹಾಗೂ ಶುಭ್‌ಮನ್ ಗಿಲ್ ಜೋಡಿ ಆಕರ್ಷಕ 200 ರನ್ ಜತೆಯಾಟವಾಡಿತು. ಇದಾದ ಬಳಿಕ ಸೂರ್ಯಕುಮಾರ್ ಯಾದವ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಭಾರತ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.

ಆಸೀಸ್‌ ಎದುರು ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾಗೆ ಬಿಗ್ ಶಾಕ್..! ಕೊನೆಯ ಪಂದ್ಯದಿಂದ ಸ್ಟಾರ್ ಆಲ್ರೌಂಡರ್ ಔಟ್

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಂದು ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನು ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ ತಂಡವು ಅಕ್ಟೋಬರ್ 08ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ ನೋಡಿ:

ರೋಹಿತ್‌ ಶರ್ಮಾ(ನಾಯಕ), ಹಾರ್ದಿಕ್‌ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌, ಕುಲ್ದೀಪ್‌ ಯಾದವ್, ಮೊಹಮ್ಮದ್ ಶಮಿ, ಅಕ್ಷರ್‌ ಪಟೇಲ್, ಇಶಾನ್ ಕಿಶನ್‌, ಸೂರ್ಯಕುಮಾರ್ ಯಾದವ್.

Follow Us:
Download App:
  • android
  • ios