ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಒಂದೇ ದಿನ 20ಕ್ಕೂ ಹೆಚ್ಚು ಮಂದಿಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಮಕ್ಕಳು, ವಯಸ್ಕರು ಸೇರಿದಂತೆ ಹಲವರು ನಾಯಿ ಕಡಿತಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಸ್ಥರು ನಾಯಿಯನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ನಂಜನಗೂಡು (ಜೂ.27): ತಾಲೂಕಿನ ಹುಲ್ಲಹಳ್ಳಿಯಲ್ಲಿ ಒಂದೇ ದಿನ ಸುಮಾರು 20ಕ್ಕೂ ಹೆಚ್ಚು ಮಂದಿಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿರುವ ಘಟನೆ ಗುರುವಾರ ನಡೆದಿದೆ.

Add Asianetnews Kannada as a Preferred SourcegooglePreferred

ಗುರುವಾರ ಸಂಜೆ 4ರ ಸಮಯದಲ್ಲಿ ಮಕ್ಕಳು ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಬೀದಿ ನಾಯಿ ಏಕಾಏಕಿ ದಾಳಿ ಮಾಡಿ ಸಿಕ್ಕ ಸಿಕ್ಕ ಮಕ್ಕಳಿಗೆ ಕಡಿದು ಓಡಿದ್ದು, ನಾಯಕರ ಬೀದಿ, ಅಂಬೇಡ್ಕರ್ ಜೋಡಿ ರಸ್ತೆ ಹಾಗೂ ಬಸ್ ನಿಲ್ದಾಣದ ಮುಂಭಾಗದಲ್ಲಿ ಬಸ್‌ ಗಾಗಿ ಕಾಯುತ್ತಿದ್ದ ಓರ್ವನಿಗೂ ಕಚ್ಚಿ ಆತಂಕ ಸೃಷ್ಟಿಸಿದೆ.

ರಾತ್ರಿ 7ರವರೆಗೆ ಗ್ರಾಮದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿಶ್ಚಿತ (4 ವರ್ಷ), ಅನಿತಾ (35), ವಿನೋದ (18), ಅಂಜಲಿ (12) ಧನುಷ್ (5), ರವಿಕುಮಾರ್ (12), ಅರ್ಮಾನ್ (3), ಸವಿತಾ (37), ಗಿರೀಶ್ (40), ಉಸಬ್ ಖಾನ್ (7), ಕಾಳಸ್ವಾಮಿ (36) ನಾಯಿ ಕಡಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದು ಸುಮಾರು 10ಕ್ಕೂ ಹೆಚ್ಚು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

ಶಾಲಾ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಕೈ- ಕಾಲು, ಬೆನ್ನಿನ ಹಿಂಬದಿ, ತೊಡೆ ಭಾಗಗಳಿಗೆ ನಾಯಿ ಕಚ್ಚಿದೆ. ರಸ್ತೆಯಲ್ಲಿ ಸಿಕ್ಕ ಸಿಕ್ಕವರೆ ಮೇಲೆ ಎರಗಲು ಯತ್ನಿಸಿದ ನಾಯಿಯನ್ನು ಹಿಡಿಯಲು ಗ್ರಾಪಂ ಸಿಬ್ಬಂದಿಗಳೊಡಗೂಡಿ ಗ್ರಾಮಸ್ಥರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಹೀಗಾಗಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ತಕ್ಷಣ ಸಿಕ್ಕಸಿಕ್ಕವರನ್ನು ಕಚ್ಚುತ್ತಿರುವ ಬೀದಿ ನಾಯಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಗುರುವಾರ ಒಂದೇ ದಿನ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳಿಗೆ ರೆಬಿಸ್ ಕಾಯಿಲೆ ತಡೆ ಚುಚ್ಚು ಮದ್ದು ಚಿಕಿತ್ಸೆ ಕೊಡಲಾಗಿದೆ ಎಂದು ಹುಲ್ಲಹಳ್ಳಿ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.