ಸಂಜೀವಿನಿನಗರ ನಿವಾಸಿ ಕಾವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡವರು. ಪತಿ ಪ್ರವೀಣ್‌ ಕುಮಾರ್‌ ಹಾಗೂ ಆತನ ಪೋಷಕರ ವಿರುದ್ಧ ವರಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಬೆಂಗಳೂರು(ಫೆ.13): ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂಜೀವಿನಿನಗರ ನಿವಾಸಿ ಕಾವ್ಯಶ್ರೀ(24) ಆತ್ಮಹತ್ಯೆ ಮಾಡಿಕೊಂಡವರು. ಪತಿ ಪ್ರವೀಣ್‌ ಕುಮಾರ್‌ ಹಾಗೂ ಆತನ ಪೋಷಕರ ವಿರುದ್ಧ ವರಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತುಮಕೂರು ಜಿಲ್ಲೆ ಕುಣಿಗಲ್‌ ಮೂಲದ ಪ್ರವೀಣ್‌ ಕುಮಾರ್‌ ಮತ್ತು ಕಾವ್ಯಶ್ರೀ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಂದು ವರ್ಷದ ಮಗುವಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ ಪ್ರವೀಣ್‌ ಕುಟುಂಬದೊಂದಿಗೆ ಸಂಜೀವಿನಿ ನಗರದಲ್ಲಿ ನೆಲೆಸಿದ್ದರು.

ಶಿಕ್ಷಕನಿಂದ ಮಾನಹಾನಿಕಾರಕ ಮೆಸೇಜ್ ರವಾನೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ!

ಪ್ರವೀಣ್‌ ಹಾಗೂ ಆತನ ಕುಟುಂಬದವರು ಕಾವ್ಯಶ್ರೀಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದರು ಎನ್ನಲಾಗಿದೆ. ಈ ನಡುವೆ ಪ್ರವೀಣ್‌ಗೆ ಬೇರೆ ಹೆಂಗಸಿನ ಜತೆಗೆ ಅನೈತಿಕ ಸಂಬಂಧವಿತ್ತು. ಈ ವಿಚಾರ ಕಾವ್ಯಶ್ರೀ ಅವರಿಗೆ ಗೊತ್ತಾಗಿ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಕಾವ್ಯಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಕಾವ್ಯಶ್ರೀ ಪೋಷಕರು ಅಳಿಯ ಪ್ರವೀಣ್‌ ಮತ್ತು ಆತನ ಕುಟುಂಬದ ವಿರುದ್ಧ ವರಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜಗೋಪಾಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.