‘ನನ್ನ ಸಾವಿಗೆ ನಾನೇ ಕಾರಣ’ ಎಂದು ಮರಣಪತ್ರ ಬರೆದಿಟ್ಟು ಮಹಿಳಾ ಸಾಫ್ಟ್‌ವೇರ್‌ ಎಂಜಿನಿಯರ್‌ ಪೇಯಿಂಗ್‌ ಗೆಸ್ಟ್‌(ಪಿಜಿ) ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ವೈಟ್‌ಫೀಲ್ಡ್‌ ವ್ಯಾಪ್ತಿಯ ಪ್ರಶಾಂತ್‌ ಲೇಔಟ್‌ನಲ್ಲಿ ನಡೆದಿದೆ.  

ಬೆಂಗಳೂರು (ಅ.05): ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಮರಣಪತ್ರ ಬರೆದಿಟ್ಟು ಮಹಿಳಾ ಸಾಫ್ಟ್‌ವೇರ್‌ ಎಂಜಿನಿಯರ್‌ ಪೇಯಿಂಗ್‌ ಗೆಸ್ಟ್‌(ಪಿಜಿ) ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ವೈಟ್‌ಫೀಲ್ಡ್‌ ವ್ಯಾಪ್ತಿಯ ಪ್ರಶಾಂತ್‌ ಲೇಔಟ್‌ನಲ್ಲಿ ನಡೆದಿದೆ. ಆಂಧ್ರಪ್ರದೇಶದ ಕಡಪ ಮೂಲದ ಗೌತಮಿ(25) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಗೌತಮಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಗೌತಮಿ ಪೋಷಕರು ಆಂಧ್ರಪ್ರದೇಶದಲ್ಲಿ ನೆಲೆಸಿದ್ದಾರೆ. ಬಿಇ ಪದವಿಧರೆಯಾದ ಗೌತಮಿ ಕಳೆದ 2 ವರ್ಷಗಳಿಂದ ನಗರದ ವೈಟ್‌ಫೀಲ್ಡ್‌ನ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಶಾಂತ್‌ ಲೇಔಟ್‌ನ ಪಿ.ಜಿಯಲ್ಲಿ ಉಳಿದುಕೊಂಡಿದ್ದಳು. ಗುರುವಾರ ಸಂಜೆ ಪಿಜಿ ಕಟ್ಟಡದ 5ನೇ ಮಹಡಿಗೆ ತೆರಳಿ ಏಕಾಏಕಿ ಕೆಳಗೆ ಜಿಗಿದಿದ್ದಾಳೆ. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಡೆತ್‌ ನೋಟ್‌ ಪತ್ತೆ: ಘಟನೆ ಸುದ್ದಿ ತಿಳಿದು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಪಿಜಿ ಕೊಠಡಿಯಲ್ಲಿ ಮರಣಪತ್ರವೊಂದು ಪತ್ತೆಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ, ನನ್ನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಬೇಡಿ’ ಎಂದಷ್ಟೇ ಬರೆದಿರುವುದು ಕಂಡು ಬಂದಿದೆ.

ಚಮಚಗಿರಿ ಭಾಷಣ ಮಾಡುವ ಮೂಲಕ ದಸರಾ ಪಾವಿತ್ರ್ಯತೆ ಹಾಳು ಮಾಡಿದ್ದಾರೆ: ಎಚ್.ವಿಶ್ವನಾಥ್

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಲಾಗಿದೆ. ಈ ಸಂಬಂಧ ವೈಟ್‌ಫೀಲ್ಡ್‌ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.