Love Breakup: ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ತನ್ನ ಪ್ರೇಯಸಿ ಎದುರೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ ಘಟನೆ ಆನೇಕಲ್ ವ್ಯಾಪ್ತಿಯಲ್ಲಿ ನಡೆದಿದೆ.
ಆನೇಕಲ್ (ಜೂ.20): ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ತನ್ನ ಪ್ರೇಯಸಿ ಎದುರೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಾಯಗೊಂಡ ಯುವಕನನ್ನು ಚಿದಂಬರ ಮಲ್ಲಪ್ಪ ಮರಮ್ಮಣ್ಣನವರ ಎಂದು ಗುರುತಿಸಲಾಗಿದೆ. ಆತ ಕಳೆದ ಕೆಲವು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಯುವತಿ ಸಂಬಂಧವನ್ನು ಮುರಿದುಕೊಂಡಿದ್ದಳು.
ಈ ಹಿನ್ನೆಲೆ ಯುವತಿಯನ್ನು ಮನವೊಲಿಸಲು ಚಿದಂಬರ ಹಲವು ಬಾರಿ ಪ್ರಯತ್ನಿಸಿದ್ದಾನೆ ಎನ್ನಲಾಗಿದ್ದು, ಇಂದು ಯುವತಿ ವಾಸವಿದ್ದ ಪಿಜಿ (PG) ಬಳಿ ತೆರಳಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಪ್ರಕರಣ ದಾಖಲು
ಜಗಳದ ಮಧ್ಯೆ ಭಾವೋದ್ವೇಗಕ್ಕೆ ಒಳಗಾದ ಚಿದಂಬರ ತನ್ನ ಬಳಿಯಿದ್ದ ಚಾಕುವಿನಿಂದ ಹೊಟ್ಟೆಗೆ ತಾನೇ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ್ದಾನೆ. ಘಟನೆಯನ್ನು ಕಂಡ ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


