ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಅಳಿಯನೊಬ್ಬ ತನ್ನ ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ ತೊರೆದು ಹೋಗಲು ಅತ್ತೆಯೇ ಕಾರಣ ಎಂದು ಭಾವಿಸಿ ವೇಣುಗೋಪಾಲ್ ಎಂಬಾತ ರುಕ್ಮಿಣಿ ಎಂಬ ತನ್ನ ಅತ್ತೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು (ಸೆ.06): ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ಅಳಿಯನೊಬ್ಬ ತನ್ನ ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೇಣುಗೋಪಾಲ್ ಎಂಬ ವ್ಯಕ್ತಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ತನ್ನ ಅತ್ತೆ ರುಕ್ಮಿಣಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

Add Asianetnews Kannada as a Preferred SourcegooglePreferred

ಘಟನೆಯ ಹಿನ್ನೆಲೆ

ಆನೇಕಲ್‌ನ ಶಂಕರ್ ನಾಗ್ ರಸ್ತೆಯ ನಿವಾಸಿಗಳಾದ ರುಕ್ಮಿಣಿ ಅವರ ಮಗಳು ನಂದಿನಿಯನ್ನು ವೇಣುಗೋಪಾಲ್ 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಕಳೆದ ಒಂದು ತಿಂಗಳಿನಿಂದ ಗಂಡ-ಹೆಂಡತಿ ನಡುವೆ ನಿರಂತರ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತ ಪತ್ನಿ ನಂದಿನಿ ತನ್ನ ಪತಿಯನ್ನು ಬಿಟ್ಟು ಹೋಗಿದ್ದರು. ಈ ಜಗಳಕ್ಕೆ ಮತ್ತು ಪತ್ನಿ ತನ್ನನ್ನು ಬಿಟ್ಟು ಹೋಗಲು ಅತ್ತೆ ರುಕ್ಮಿಣಿ ಕಾರಣ ಎಂದು ವೇಣುಗೋಪಾಲ್ ಭಾವಿಸಿದ್ದಾನೆ. ಅತ್ತೆ ಇಲ್ಲಸಲ್ಲದ ವಿಷಯಗಳನ್ನು ಹೇಳಿ ತಮ್ಮ ಸಂಸಾರದಲ್ಲಿ ಬಿರುಕು ಮೂಡಿಸಿದ್ದಾರೆ ಎಂದು ಆತ ಆಕ್ರೋಶಗೊಂಡಿದ್ದನು.

ದೇವಸ್ಥಾನದ ರಸ್ತೆಯಲ್ಲಿ ನಡೆದ ದಾಳಿ

ಶುಕ್ರವಾರ ಸಂಜೆ ರುಕ್ಮಿಣಿ ಅವರು ತಮ್ಮ ಸ್ನೇಹಿತರೊಂದಿಗೆ ಆನೇಕಲ್‌ನ ತಿಮ್ಮರಾಯಸ್ವಾಮಿ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದರು. ಇದೇ ಸಮಯದಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದ ಅಳಿಯ ವೇಣುಗೋಪಾಲ್, ರಸ್ತೆಯಲ್ಲಿಯೇ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ರುಕ್ಮಿಣಿ ಅವರನ್ನು ಕಂಡ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸೇರಿಸಲು ಮುಂದಾದರು.

ಸಾರ್ವಜನಿಕರಿಂದ ಆರೋಪಿ ಸೆರೆ

ಅತ್ತೆಯ ಮೇಲೆ ಹಲ್ಲೆ ನಡೆಸಿದ ನಂತರ ಆರೋಪಿ ವೇಣುಗೋಪಾಲ್ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸದೆ ರಸ್ತೆಯಲ್ಲಿಯೇ ಕುಳಿತಿದ್ದನು. ಇದನ್ನು ಕಂಡ ಸ್ಥಳೀಯರು ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರುಕ್ಮಿಣಿ ಅವರನ್ನು ತಕ್ಷಣವೇ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.