ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಕಾರ್ಯಕ್ರಮದ ಸ್ಥಳ ಬದಲಾವಣೆಯಾಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬದಲು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಕಾರ್ಯಕ್ರಮ ಆಯೋಜಿಸುವ ಸಾಧ್ಯತೆಗಳಿವೆ.

ಬೆಂಗಳೂರು (ಜೂ.4): ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಕಾರ್ಯಕ್ರಮ ಮತ್ತೊಮ್ಮೆ ಬದಲಾವಣೆಯ ಸಾಧ್ಯತೆ ಎದುರಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ ಐದರಿಂದ ಆರು ಗಂಟೆಯವರೆಗೆ ನಡೆಯಲಿರುವ ಅಭಿನಂದನಾ ಕಾರ್ಯಕ್ರಮಕ್ಕೆ ಟಿಕೆಟ್ ಅಥವಾ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶವಿದೆ. ಆದರೆ, ಈಗ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಕಾರ್ಯಕ್ರಮ ಆಯೋಜಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಭಾಗವಹಿಸಲಿದ್ದಾರೆ. ಈ ಬಾರಿ ಯಾವುದೇ ವಿಜಯ ಪಥಸಂಚಲನ ಇರುವುದಿಲ್ಲ. ಕೆಎಸ್‌ಸಿಎ ಕಾರ್ಯದರ್ಶಿ ಶಂಕರ್ ಅವರು ಕಮಿಷನರ್ ಜೊತೆಗೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಶೀಲನೆಯ ಬಳಿಕ ಕಾರ್ಯಕ್ರಮದ ಸ್ಥಳದಲ್ಲಿ ಬದಲಾವಣೆ ಆಗುವ ಸಂಭವವಿದೆ.

ಪ್ರಸ್ತುತ, ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಯುತ್ತಿದ್ದು, ಗೃಹ ಸಚಿವರು ಮುಖ್ಯಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸ್ಥಳದಲ್ಲಿ ಸೀಮಿತ ಪಾರ್ಕಿಂಗ್ ವ್ಯವಸ್ಥೆ ಇರುವ ಕಾರಣ, ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಗಳನ್ನು ಬಳಸಲು ಸಲಹೆ ನೀಡಲಾಗಿದೆ. ಅಲ್ಲದೆ, ನಗರ ಮಧ್ಯೆ ಪ್ರದೇಶವನ್ನು ಮಧ್ಯಾಹ್ನ ಮೂರರಿಂದ ರಾತ್ರಿ ಎಂಟು ಗಂಟೆಯವರೆಗೆ ತಪ್ಪಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.