ಕೋಲಾರ ಜಿಲ್ಲೆಯ ಆ್ಯಂಡರ್‌ಸನ್‌ ಪೇಟೆಯ ಅಂಗಡಿಯಲ್ಲಿ ಬಚ್ಚಿಟ್ಟಿದ್ದ ಆರೋಪಿ| ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಂಗಳೂರಿನ ಅರಣ್ಯ ಸಂಚಾರಿ ದಳದ ಸಿಬ್ಬಂದಿ| ಮೂಢ ನಂಬಿಕೆಗಳ ಕಾರಣದಿಂದ ಈ ಹಾವನ್ನು ಅಕ್ರಮವಾಗಿ ಇಟ್ಟುಕೊಳ್ಳುವುದು, ಮಾರಾಟ ಮಾಡುವುದು, ಕೊಲ್ಲುವುದು ಸೇರಿದಂತೆ ಇತರೆ ಕಾನೂನು ಬಾಹಿರ ಕೃತ್ಯಗಳಲ್ಲಿ ಬಳಕೆ| 

ಬೆಂಗಳೂರು(ಸೆ.20): ಅಕ್ರಮವಾಗಿ ಸಂಗ್ರಹಿಸಿದ್ದ ಅಳಿವಿನಂಚಿನಲ್ಲಿರುವ ಮಣ್ಣು ಮುಕ್ಕ ಹಾವನ್ನು(ಎರಡು ತಲೆ ಹಾವು) ಸಂರಕ್ಷಿಸಿರುವ ಬೆಂಗಳೂರು ಸಂಚಾರಿ ಅರಣ್ಯ ದಳದ ಸಿಬ್ಬಂದಿ, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಬಲೆ ಬೀಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖಚಿತ ಮಾಹಿತಿ ಮೇರೆಗೆ ಕೋಲಾರ ಜಿಲ್ಲೆಯಲ್ಲಿ ದಾಳಿ ನಡೆಸಿದ ಬೆಂಗಳೂರಿನ ಅರಣ್ಯ ಸಂಚಾರಿ ದಳದ ಸಿಬ್ಬಂದಿ, ಕೆಜಿಎಫ್‌ ತಾಲೂಕಿನ ಆ್ಯಂಡರ್‌ಸನ್‌ ಪೇಟೆಯ ಬಿಎಂ ರಸ್ತೆಯ ಆರ್ಫಾತ್‌ ಫಿಶ್‌ ಸ್ಟಾಲ್‌ನಲ್ಲಿ ಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸುಮಾರು 1.68 ಕೆಜಿ ತೂಕವಿರುವ 114 ಸೆಂಟಿ ಮೀಟರ್‌ ಉದ್ದದ ಹಾವನ್ನು ಒಂದು ವಾರಕ್ಕೂ ಹೆಚ್ಚು ದಿನಗಳಿಂದ ಸಂಗ್ರಹಿಸಿದ್ದು, ಸೂಕ್ತ ಆಹಾರ ನೀಡಿಲ್ಲ. ಹೀಗಾಗಿ ಅದರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬನ್ನೇರುಘಟ್ಟದ ಪುನರ್ವಸತಿ ಕೇಂದ್ರದಲ್ಲಿರಿಸಿ ನಿಗಾ ವಹಿಸಲಾಗುತ್ತಿದೆ ಎಂದು ಸಂಚಾರಿ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫುಡ್‌ ಡೆಲಿವರಿ ನೆಪದಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್‌

ಈ ಕುರಿತು ಮಾಹಿತಿ ಲಭ್ಯವಾದ ತಕ್ಷಣ ಅಂಗಡಿಯ ಮೇಲೆ ದಾಳಿ ನಡೆಸಲಾಗಿತ್ತು. ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಅತನನ್ನು ಬಂಧಿಸಲು ಕಾರ್ಯಚರಣೆ ಮಾಡಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಂಗಾಧರ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದರು.

ದೇಶದಲ್ಲಿ ಮಣ್ಣು ಮುಕ್ಕ ಹಾವಿನ ಸಂತತಿ ಅತ್ಯಂತ ವಿರಳ ಮತ್ತು ಅಳಿವಿನಂಚಿನಲ್ಲಿದೆ. ಇವುಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದೆ. ಮೂಢ ನಂಬಿಕೆಗಳ ಕಾರಣದಿಂದ ಈ ಹಾವನ್ನು ಅಕ್ರಮವಾಗಿ ಇಟ್ಟುಕೊಳ್ಳುವುದು, ಮಾರಾಟ ಮಾಡುವುದು, ಕೊಲ್ಲುವುದು ಸೇರಿದಂತೆ ಇತರೆ ಕಾನೂನು ಬಾಹಿರ ಕೃತ್ಯಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.