ನಟ ದರ್ಶನ್ ಆಗಿರಲಿ, ಸಚಿವ ಪರಮೇಶ್ವರ ಆಗಿರಲಿ ಎಲ್ಲರಿಗೂ ಕಾನೂನು ಒಂದೇ. ಪೊಲೀಸರು ಮುಕ್ತವಾಗಿ ತನಿಖೆ ಮಾಡಲು ಫ್ರೀಹ್ಯಾಂಡ್ ಕೊಟ್ಟಿದ್ದೇವೆ ಎಂದು ಗೇಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ಬೆಂಗಳೂರು (ಜೂ.12): 'ಎಲ್ಲರಿಗೂ ಕಾನೂನು ಒಂದೇ. ನಟ ದರ್ಶನ್‌ಗು ಕಾನೂನು ಒಂದೇ, ಪರಮೇಶ್ವರ್‌ಗು ಒಂದೇ ಕಾನೂನು. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು' ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

Add Asianetnews Kannada as a Preferred SourcegooglePreferred

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ‌. ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ‌. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು.ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು ಎಂದು ತರಾಟೆ ತೆಗೆದಕೊಂಡಿದ್ದರು.

ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದ ಕೊಲೆಯಾದ ರೇಣುಕಾಸ್ವಾಮಿ ಬೆಂಬಲಿಗರು

ದನಟ ದರ್ಶನ್ ಕೇಸ್ ಕೊಟ್ಟಿದ್ದರೆ ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು. ಆದರೆ, ಘಟನೆ ನಡೆದು ಹೋಗಿದೆ. ಯಾರು ಏನು ಮಾಡುವುದಕ್ಕೆ ಆಗುವುದಿಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಇಲಾಖೆ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಕೊಲೆ ಕೇಸ್‌ನಿಂದ ಬಚಾವಾಗಲು ಪ್ರಯತ್ನ ಮಾಡಿರೋದು ಗೊತ್ತಿಲ್ಲ: ನಟ ದರ್ಶನ್ ಪ್ರಕರಣದಿಂದ ಬಚಾವ್ ಆಗಲು ಪ್ರಭಾವಿ ರಾಜಕಾರಣಿಯಿಂದ ಪ್ರಯತ್ನ ಮಾಡಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನನಗೆ ಗೊತ್ತಿರುವಂತೆ ಯಾರು ಸಹ ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನೆಲ್ಲ‌ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಅದನ್ನು ಪೊಲೀಸರು ಮಾಡುತ್ತಾರೆ. ಇದರಲ್ಲಿ ಸರ್ಕಾರದಿಂದ ನಾವ್ಯಾರು ಮಧ್ಯ ಪ್ರವೇಶಿಸುವುದಿಲ್ಲ. ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ಸಚಿವ ಪರಮೇಶ್ವರ ತಿಳಿಸಿದರು.

'ನನ್ನ ಮಗನ್ನ ಸಾಯಿಸಿದಂತೆ ನಟ ದರ್ಶನನ್ನೂ ಸಾಯಿಸಿ ಬಿಡಿ' ಮೃತ ರೇಣುಕಾಸ್ವಾಮಿ ತಾಯಿ ಆಕ್ರೋಶ! 

ರೇಣುಕಾಸ್ವಾಮಿ ಕೊಲೆ ಕೇಸ್ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದ 13 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ. ತನಿಖೆ ಪೂರ್ಣವಾದ ಬಳಿಕ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು ನಾವು ಕೇಳುವುದಿಲ್ಲ, ಅವರೂ ನಮಗೆ ಹೇಳುವುದಿಲ್ಲ. ನಟ ದರ್ಶನ್ ಅವರ ಘಟನೆಗಳು ಇದೇ ಮೊದಲಲ್ಲ. ಮಾಧ್ಯಮಗಳಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಪೊಲೀಸರು ತನಿಖೆ ಮಾಡುತ್ತಾರೆ. ತನಿಖೆ ನಂತರ ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ನೋಡಬೇಕು. ಪೊಲೀಸರಿಗೆ ಫ್ರೀ ಹ್ಯಾಂಡ್ ಇದೆ. ಸೆಕ್ಷನ್ ಹಾಕುವುದಕ್ಕೆ ಅವರು ಸಮರ್ಥರು. ನಮ್ಮನ್ನು ಕೇಳಿಕೊಂಡು ಸೆಕ್ಷನ್ ಹಾಕುವುದಿಲ್ಲ ಎಂದು ಹೇಳಿದರು.