ಕಳಸದಲ್ಲಿ ಯುವಕನೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು (ಸೆ.5): ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವಕನೊಬ್ಬ ಯುವತಿಗೆ ಚಾಕುವಿನಿಂದ ಗಂಭೀರ ಗಾಯಗೊಳಿಸಿದ ಆಘಾತಕಾರಿ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ನಡೆದಿದೆ.

Add Asianetnews Kannada as a Preferred SourcegooglePreferred

ಕಾವ್ಯ (24), ಪಗಾಲ್ ಪ್ರೇಮಿಯಿಂದ ಗಾಯಗೊಂಡಿರುವ ಯುವತಿ. ಕಲ್ಲಿನಿಂದ ಹಲ್ಲೆ ಮಾಡಿ, ತಲೆ ಮತ್ತು ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಆರೋಪಿ. ಕಳಸ ತಾಲೂಕಿನ ಹೆಗ್ಗೋಡು ಮೂಲದ ಕಾವ್ಯ, ಸ್ಥಳೀಯ ಖಾಸಗಿ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆರೋಪಿಯಾದ ಯುವಕ ಕೊಪ್ಪ ತಾಲೂಕಿನ ಗುಡ್ಡತೋಟ ಮೂಲದವನಾಗಿದ್ದಾನೆ. ಪ್ರೀತಿಯ ಪ್ರಸ್ತಾಪವನ್ನು ಕಾವ್ಯ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ, ನಡು ರಸ್ತೆಯಲ್ಲಿ ಕಾವ್ಯರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ, ಚಾಕುವಿನಿಂದ ಇರಿದು ತಲೆಮರೆಸಿಕೊಂಡಿದ್ದಾನೆ.

ಗಂಭೀರವಾಗಿ ಗಾಯಗೊಂಡ ಕಾವ್ಯರನ್ನು ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಘಟನೆಯಿಂದ ಕಳಸ ಪಟ್ಟಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಆರೋಪಿಯ ಬಂಧನಕ್ಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.