Derogatory Post on Veerendra Heggade:  ಡಾ. ವೀರೇಂದ್ರ ಹೆಗ್ಗಡೆ ವಿರುದ್ದ ಅಪಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ಸೋಮನಾಥ ನಾಯಕ್ ಜೈಲು ಸೇರಿದ್ದಾರೆ 

ವರದಿ: ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

Add Asianetnews Kannada as a Preferred SourcegooglePreferred

ಮಂಗಳೂರು (ಅ. 31): ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Veerendra Heggade) ವಿರುದ್ದ ಅಪಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದ ತೀರ್ಪಿನಂತೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಜೈಲು ಸೇರಿದ್ದಾರೆ. ಸುಧೀರ್ಘ ಕಾನೂನು ಹೋರಾಟದ ಬಳಿಕ ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂ ಆಗಿದೆ.‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್, ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿದ ಆರೋಪ ಮಾಡಿದ್ದರು. ಅಲ್ಲದೇ ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ನಿರಂತರವಾಗಿ ಸಾಮಾಜಿಕ ತಾಣಗಳ ಮೂಲಕ ಬರಹಗಳನ್ನ ಬರೆದಿದ್ದರು. 

ಈ ಬಗ್ಗೆ ವಿಚಾರಣೆ ‌ನಡೆಸಿ ಹೆಗ್ಗಡೆಯವರ ವಿರುದ್ದ ಅಪಪ್ರಚಾರ ಮಾಡದಂತೆ ಬೆಳ್ತಂಗಡಿ ಕೋರ್ಟ್ ಪ್ರತಿಬಂಧಕಾಜ್ಞೆ ವಿಧಿಸಿತ್ತು. ಆದರೆ ಅದನ್ನ ಉಲ್ಲಂಘಿಸಿ ಮತ್ತೆ ಆರೋಪ ಮುಂದುವರೆಸಿದ್ದ ಸೋಮನಾಥ ನಾಯಕ್ ಸಾಮಾಜಿಕ ತಾಣಗಳಲ್ಲೂ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ ಮಾಡಿದ್ದರು ಎಂದು ದೂರಲಾಗಿದೆ. 

ಸುಧೀರ್ಘ ವಿಚಾರಣೆ ಬಳಿಕ ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ವಿಧಿಸಿ ಬೆಳ್ತಂಗಡಿ ಕೋರ್ಟ್ ಆದೇಶ ಮಾಡಿತ್ತು.‌ ಆದರೆ ಬೆಳ್ತಂಗಡಿ ಕೋರ್ಟ್ ತೀರ್ಪು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದ ನಾಯಕ್ ಕಾನೂನು ಹೋರಾಟ ನಡೆಸಿದ್ದರು. 

ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸೋಮನಾಥ್‌: ಆದರೆ ಸುಧೀರ್ಘ ವಿಚಾರಣೆ ಬಳಿಕ ಬೆಳ್ತಂಗಡಿ ಕೋಟರಿನ ಜೈಲು ಶಿಕ್ಷೆಯನ್ನು ಖಾಯಂಗೊಳಿಸಿ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಇದಕ್ಕೂ ಸುಮ್ಮನಾಗದ ಸೋಮನಾಥ ನಾಯಕ್, ಹೈ ಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರು. ಆದರೆ ಸುಪ್ರೀಂ ಕೋರ್ಟ್ ನಿಂದಲೂ ಬೆಳ್ತಂಗಡಿ ಕೋರ್ಟ್ ನ ಜೈಲು ಶಿಕ್ಷೆ ಖಾಯಂಗೊಳಿಸಿ ತೀರ್ಪು ಪ್ರಕಟವಾಗಿದೆ. ಹೀಗಾಗಿ ಇಂದು ಅಪಾರ ಬೆಂಬಲಿಗರ ಜೊತೆ ಸೋಮನಾಥ ನಾಯಕ್ ಬೆಳ್ತಂಗಡಿ ಕೋರ್ಟ್‌ಗೆ ಶರಣಾಗಿದ್ದಾರೆ. ಮೂರು ತಿಂಗಳ ಸೆರೆ ವಾಸಕ್ಕೆ ಮಂಗಳೂರು ಜೈಲಿಗೆ ಕಳುಹಿಸಿದ ಬೆಳ್ತಂಗಡಿ ನ್ಯಾಯಾಲಯ, ಜೈಲು ಶಿಕ್ಷೆ ಜೊತೆಗೆ 4.5ಲಕ್ಷ ಪರಿಹಾರ ನೀಡಲು ಆದೇಶ ನೀಡಿದೆ.

ಇದನ್ನೂ ಓದಿ:ಹಿರಿಯ ನಾಗರಿಕರ ಪಾಲನೆಗೆ 500 ಮನೆ: ವೀರೇಂದ್ರ ಹೆಗ್ಗಡೆ ಘೋಷಣೆ

ಪ್ರಕರಣದ ಹಿನ್ನೆಲೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಥವಾ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಅಲ್ಲಿಯ ಸಂಸ್ಥೆಗಳ ಕುರಿತು ಗೌರವಕ್ಕೆ ಚ್ಯುತಿ ತರುವ ಯಾವುದೇ ರೀತಿಯ ಬರವಣಿಗೆ ಅಥವಾ ಹೇಳಿಕೆ ನೀಡಬಾರದೆಂದು ಈ ಹಿಂದೆ ಬೆಳ್ತಂಗಡಿ ಸಿವಿಲ್‌ ನ್ಯಾಯಾಲಯ ಸೋಮನಾಥ ನಾಯಕ್‌ ಮತ್ತು ಇತರ 5 ಮಂದಿಯ ವಿರುದ್ಧ ಪ್ರತಿಬಂಧಕಾಜ್ಞೆ ಮಾಡಿತ್ತು. ಆದರೂ ಸೋಮನಾಥ ನಾಯಕ್‌ ಸುಳ್ಳು ಆರೋಪಗಳನ್ನು ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮುಖೇನ ಮಾಡುತ್ತಲೇ ಇದ್ದರು. ಈ ವಿಚಾರವನ್ನು ಕ್ಷೇತ್ರದ ಪರವಾಗಿ ನ್ಯಾಯಾಲಯದ ಮುಂದಿರಿಸಲಾಯಿತು. ಸುದೀರ್ಘ ವಿಚಾರಣೆ ನಡೆದು ಸೋಮನಾಥ ನಾಯಕ್‌ ದೋಷಿ ಎಂದು ಪರಿಗಣಿಸಿದ ನ್ಯಾಯಾಲಯ ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆ, ಕ್ಷೇತ್ರಕ್ಕೆ ರು. 4.5 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶಿಸಿ, ನಾಯಕ್‌ ಆಸ್ತಿಯನ್ನು ಮುಟ್ಟುಗೋಲು ಕೂಡ ಹಾಕಿಕೊಂಡಿತ್ತು.