ಬೋಳಂತೂರಿನ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ.

ಬಂಟ್ವಾಳ (ಫೆ.17): ತಾಲೂಕಿನ ಬೋಳಂತೂರು ನಾರ್ಶದ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ತಂಡದಿಂದ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರ ತಂಡ ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದ ಒಟ್ಟು ಬಂಧಿತರ ಸಂಕ್ಯೆ ಏಳಕ್ಕೆ ಏರಿದೆ.

Add Asianetnews Kannada as a Preferred SourcegooglePreferred

ತ್ರಿಶೂರು ಜಿಲ್ಲೆಯ ಕೊಡಂಗಲ್ಲೂರು ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿರುವ ಶಹೀರ್ ಬಾಬು (49), ಸ್ಥಳೀಯ ಆರೋಪಿ ಕೊಳ್ನಾಡು ಬಂಟ್ವಾಳ ನಿವಾಸಿ ಸಿರಾಜುದ್ದೀನ್‌ (37), ಬಂಟ್ವಾಳ ನಿವಾಸಿ ಮೊಹಮ್ಮದ್‌ ಇಕ್ಬಾಲ್‌ (38) ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್‌ ಅನ್ಸಾರ್‌ (27) ಬಂಧಿತರು.

ಇದನ್ನೂ ಓದಿ: ಸಿಬಿಐ ಅಧಿಕಾರಿ ಸೋಗಿನಲ್ಲಿ ವಂಚನೆ: ವೃದ್ಧೆಗೆ ಕರೆ ಮಾಡಿ ₹42.85 ಲಕ್ಷ ಪಂಗನಾಮ! ನಿಮಗೂ ಇಂಥ ಕಾಲ್ ಬರಬಹುದು ಎಚ್ಚರ!

ಕೇರಳದ ಕೊಡಂಗಲ್ಲೂರು ಪೊಲೀಸ್ ಠಾಣೆಯ ಎಎಸ್‌ಐ ಶಹೀರ್ ಬಾಬು, ಇ.ಡಿ. ತಂಡವನ್ನು ಕಟ್ಟಿ ಅವರ ಯೋಜನೆಯಂತೆ ಈ ದಾಳಿ ನಡೆದಿತ್ತು. ಘಟನೆ ನಡೆದ ಬಳಿಕ ತನ್ನ ಪಾಲಿನ ಮೊತ್ತವನ್ನು ಪಡೆದುಕೊಂಡು ಎಂದಿನಂತೆ ತಮ್ಮ ಕೆಲಸಕ್ಕೆ ಮರಳಿದ್ದ. ಈತ ಮಂಗಳೂರಿಗೆ ಬಂದು ಯಾವ ರೀತಿಯಲ್ಲಿ ಯೋಜನೆ ರೂಪಿಸಬೇಕೆಂದು ಮಾರ್ಗದರ್ಶನ ಮಾಡುತ್ತಿದ್ದ. ಇ.ಡಿ. ಅಧಿಕಾರಿಗಳಂತೆ ನಟಿಸಲು ಮತ್ತು ದರೋಡೆ ನಡೆಸಲು ಹಾಗೂ ತಪ್ಪಿಸಿಕೊಳ್ಳಲು ಸಮಗ್ರ ಮಾಹಿತಿ ನೀಡಿದ್ದ.

ಶಹೀರ್ ಬಾಬು, ಘಟನೆ ನಡೆಯುವ ಆಸುಪಾಸಿನ ದಿನಗಳಲ್ಲಿ ಆಗಾಗ ರಜೆ ತೆಗೆಯುತ್ತಿದ್ದ. ಆರಂಭದಲ್ಲಿ ವಿಟ್ಲ ಪೊಲೀಸರು ತಂಡ ರಚಿಸಿ, ಖಚಿತ ಮಾಹಿತಿಯೊಂದಿಗೆ ಕೇರಳಕ್ಕೆ ತೆರಳಿ ದಾಳಿ ಮಾಡುವ ಮಾಹಿತಿ ಈತನಿಗೆ ತಿಳಿದು, ದರೋಡೆಕೋರರು ಪರಾರಿಯಾಗುವಂತೆ ಮಾಡಿದ್ದ.ಜ.3ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಮನೆಗೆ ಇ.ಡಿ. ಅಧಿಕಾರಿಗಳ ಹೆಸರಲ್ಲಿ ದಾಳಿ ಮಾಡಿ ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖಾ ತಂಡವು ಕೇರಳದ ಕೊಲ್ಲಂ ನಿವಾಸಿಗಳಾದ ಅನಿಲ್‌ ಫರ್ನಾಂಡಿಸ್‌ (49), ಸಚ್ಚಿನ್‌ ಟಿ.ಎಸ್‌. (29) ಹಾಗೂ ಶಬಿನ್‌ ಎಸ್‌. (27) ಎಂಬವರನ್ನು ಬಂಧಿಸಿದ್ದು, ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: G Pay, PhonePeನಲ್ಲಿ ಬ್ಯಾಲೆನ್ಸ್ ಚೆಕ್ ಮಾಡಿದ್ರೆ ಸೈಬರ್ ದಾಳಿಗೆ ತುತ್ತಾಗ್ತಾರಾ?

ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇ.ಡಿ. ಅಧಿಕಾರಿಯಂತೆ ನಟಿಸಿದ ಪ್ರಧಾನ ಆರೋಪಿಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್. ಮಾರ್ಗದರ್ಶನದಲ್ಲಿ, ಜಿಲ್ಲಾ ವ್ಯಾಪ್ತಿಯ ಠಾಣೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿತ್ತು