ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಬಿ.ಎಸ್ಸಿ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರಮಾನ್ವಿ ಗ್ರಾಮದ ಸುಮಂಗಲ (21) ಮೃತ ಯುವತಿಯಾಗಿದ್ದು, ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಯಚೂರು (ಫೆ.4): ಪ್ರೀತಿ ಎಂಬ ಮಾಯೆ ಮತ್ತೊಂದು ಬಲಿ ಪಡೆದಿದೆ. ಪ್ರೇಮ ವೈಫಲ್ಯದಿಂದ ಮನನೊಂದ ಯುವತಿಯೊಬ್ಬಳು ರೈಲು ಹಳಿ ಮೇಲೆ ಮಲಗಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಸಿಂಧನೂರು-ಬೆಂಗಳೂರು ಮಾರ್ಗದ ರೈಲು ಬರುತ್ತಿದ್ದಂತೆ ಹಳಿ ಮೇಲೆ ಮಲಗಿದ ಯುವತಿ, ಕ್ಷಣಾರ್ಧದಲ್ಲಿ ತನ್ನ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾಳೆ.
ನೀರಮಾನ್ವಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ
ಮೃತ ಯುವತಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಸುಮಂಗಲ (21) ಎಂದು ಗುರುತಿಸಲಾಗಿದೆ. ಈಕೆ ಬಿ.ಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಓದಿನಲ್ಲಿ ಮುಂದಿದ್ದ ಯುವತಿ, ವೈಯಕ್ತಿಕ ಜೀವನದ ಅಪ್ಸೆಟ್ನಿಂದಾಗಿ ಇಂತಹ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದು ಕುಟುಂಬವನ್ನು ದುಃಖದಲ್ಲಿ ಮುಳುಗಿಸಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ಘಟನೆ ನಡೆದ ತಕ್ಷಣ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ಸಾವಿಗೆ ನಿಖರ ಕಾರಣವೇನು? ಈ ಸಾವಿನ ಹಿಂದೆ ಯಾರಾದರೂ ಇದ್ದಾರೆಯೇ? ನಿಜವವಾಗಿಯೂ ಪ್ರೇಮ ವೈಫಲ್ಯವೇ? ಬೇರೆ ಏನಾದರೂ ಕಾರಣ ಇದ್ದಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಮಾಡಲಿದ್ದಾರೆ.
ಗಮನಿಸಿ:
ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ದುಡುಕಿನಿಂದ ಆ8ಹತ್ಯೆಯ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಸ್ವಯಂಹಾನಿ ಮಾಡಿಕೊಳ್ಳುವ ಯೋಚನೆ/ಮನೋವ್ಯಥೆ ಅನುಭವಿಸುತ್ತಿದ್ದರೆ ಅಥವಾ ಸಂಕಷ್ಟದ ಸ್ಥಿತಿಯಲ್ಲಿದ್ದರೆ, ದಯವಿಟ್ಟು ಯಾರೊಂದಿಗಾದರೂ ಮಾತನಾಡಿ, ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಕರ್ನಾಟಕದಲ್ಲಿ ಸಹಾಯ ಮತ್ತು ಸಮಾಲೋಚನೆಗಾಗಿ ಕೆಳಗಿನ ಸೇವೆಗಳು ಲಭ್ಯವಿವೆ: 24×7 ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್ (Tele-MANAS): 14416 ಅಥವಾ 1800-89-14416 (ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಸೇವೆ). ಇದೆ ಸಂಪರ್ಕಿಸಿ.


