ನಗರದ ಹೊಸಮನೆ ಬಡಾವಣೆಯಲ್ಲಿ ನಿರ್ಮಾಣ ಕಾಮಗಾರಿ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ..

ಶಿವಮೊಗ್ಗ (ಜೂ.06): ನಗರದ ಹೊಸಮನೆ ಬಡಾವಣೆಯಲ್ಲಿ ನಿರ್ಮಾಣ ಕಾಮಗಾರಿ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಳಿಗೂಡು ಗ್ರಾಮದ ನಾಗೇಶ್ (48) ಎಂದು ಗುರುತಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವರು ಹೊಸಮನೆ ಬಡಾವಣೆಯಲ್ಲಿರುವ ದೊಡ್ಡಮ್ಮ ಜಲದುರ್ಗಮ್ಮ ದೇವಸ್ಥಾನದ ಗೋಪುರ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಮಾಹಿತಿಯ ಪ್ರಕಾರ, ದೇವಸ್ಥಾನದ ಮುಂಭಾಗದಲ್ಲಿ ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ರೇನ್‌ ರಿವರ್ಸ್‌ ಆಗಿ ಚಲಿಸುತ್ತಿದ್ದ ವೇಳೆ ನಾಗೇಶ್‌ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.

ಇದೇ ಸಂದರ್ಭದಲ್ಲಿ ಕ್ರೇನ್‌ನ ಮುಂಭಾಗದ ಚಕ್ರಗಳು ಅವರ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ತಲೆಯ ಮೇಲೆ ಚಕ್ರ ಹರಿದಿದ್ದರಿಂದ ತಲೆ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಗೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸತ್ಯನಾರಾಯಣ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.