ಶಿವಮೊಗ್ಗದಲ್ಲಿ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ.

ಶಿವಮೊಗ್ಗ (ಜುಲೈ.25): ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮೈಸೂರು, ಹಾಸನ, ರಾಯಚೂರು, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಿನನಿತ್ಯ ಹಲವಾರು ಘಟನೆಗಳು ವರದಿಯಾಗುತ್ತಿವೆ. ಈ ಬೆನ್ನಲ್ಲೇ ಶಿವಮೊಗ್ಗದ ಆಯನೂರು ಸರ್ಕಲ್‌ನಲ್ಲಿ ಕಾರು ಚಾಲನೆ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಿಪ್ಪನ್‌ಪೇಟೆ ಪಟ್ಟಣದ ನಿವಾಸಿ ಕಬೀರ್ (54) ದುರ್ದೈವಿಯಾಗಿದ್ದಾರೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದ ವೇಳೆ, ಆಯನೂರು ಸರ್ಕಲ್‌ನಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಪಕ್ಕದಲ್ಲಿದ್ದ ವ್ಯಕ್ತಿಯ ಬಳಿ ಈ ವಿಷಯವನ್ನು ತಿಳಿಸಿದ ಕೂಡಲೇ ಕಬೀರ್ ಮೂರ್ಚೆಯಿಂದ ಕುಸಿದಿದ್ದಾರೆ. ಸಹ ಪ್ರಯಾಣಿಕ ಕಾರಿನ ಬ್ರೇಕ್‌ ಹಾಕಿ ನಿಲ್ಲಿಸಿ, ಸ್ಥಳೀಯರ ನೆರವಿನೊಂದಿಗೆ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದಿದ್ದಾರೆ. ನಂತರ ಶಿವಮೊಗ್ಗದ ನಂಜಪ್ಪ ಲೈಫ್‌ಕೇರ್ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿದೆ ಆದರೂ, ಮಾರ್ಗಮಧ್ಯದಲ್ಲೇ ಕಬೀರ್ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು, ಈ ಘಟನೆ ಆರೋಗ್ಯ ತಪಾಸಣೆಯ ಮಹತ್ವವನ್ನು ಎತ್ತಿ ತೋರಿಸಿದೆ. ನಾಗರಿಕರು ಕಾಲ ಕಾಲಕ್ಕೆ ಹೃದಯ ತಪಾಸಣೆ , ಆರೋಗ್ಯಕರ ಜೀವನಶೈಲಿ ಮೂಲಕ ಹೃದಯಾಘಾತದಂತಹ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಬಹುದಾಗಿದೆ.