Bengaluru Family Dispute: ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಿ ಅಗ್ರಹಾರದಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು (ಜು.12): ಸಿಲಿಕಾನ್ ಸಿಟಿಯ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಿ ಅಗ್ರಹಾರದಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಕೇವಲ ಎರಡು ತೊಲೆ ಬಂಗಾರಕ್ಕಾಗಿ ಅಳಿಯನೇ ತನ್ನ ಅತ್ತೆಯ ಮೇಲೆ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅತ್ತೆ ಮೃತಪಟ್ಟಿದ್ದಾರೆ. ಮೃತರನ್ನು ರೋಶನಬಿ (45) ಎಂದು ಗುರುತಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರೋಪಿಯಾಗಿರುವ ಅಳಿಯ ಅಕ್ಬರ್, ಮೂರು ತಿಂಗಳ ಹಿಂದೆ ಜನಿಸಿದ ತನ್ನ ಗಂಡು ಮಗುವಿನ ಸಂದರ್ಭದಲ್ಲಿ ಅತ್ತೆ ಎರಡು ತೊಲೆ ಚಿನ್ನದ ಉಡುಗೊರೆ ನೀಡುವುದಾಗಿ ಹೇಳಿದ್ದರು ಎನ್ನಲಾಗಿದೆ. ಆದರೆ, ಹಲವು ದಿನಗಳಾದರೂ ಚಿನ್ನ ನೀಡದಿದ್ದ ಕಾರಣ ಅಕ್ಬರ್ ಅತ್ತೆಯ ಮೇಲೆ ದ್ವೇಷ ಬೆಳೆಸಿಕೊಂಡಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಜುಲೈ 10ರಂದು, ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಅಕ್ಬರ್ ಕೊಡಲಿಯಿಂದ ರೋಶನಬಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಮೂಲತಃ ಏಳು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದ ಈ ಕುಟುಂಬದಲ್ಲಿ ನಡೆದ ಈ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಕೊಲೆ ಪ್ರಕರಣ ದಾಖಲು

ರೋಶನಬಿ ಅವರ ಸಾವಿನ ಬಳಿಕ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಳಿಯ ಅಕ್ಬರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಸದ್ಯ ಕುಟುಂಬದೊಳಗಿನ ಸಣ್ಣ ವಿವಾದವೇ ಭೀಕರ ಹ*ತ್ಯೆಗೆ ಕಾರಣವಾಗಿರುವ ಈ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಕುಟುಂಬ ಸಂಬಂಧಗಳ ನಡುವಿನ ಹಿಂಸಾಚಾರದ ಗಂಭೀರತೆಯನ್ನು ಎತ್ತಿ ತೋರಿಸಿದೆ.