ಇಬ್ಬರು ದುಷ್ಕರ್ಮಿಗಳು ಮನೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನದ ಹ್ಯಾಂಡಲ್‌ ಲಾಕ್‌ ಮುರಿದು ಕದ್ದು ಪರಾರಿ ಆಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (ಜು.31) :  ಇಬ್ಬರು ದುಷ್ಕರ್ಮಿಗಳು ಮನೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನದ ಹ್ಯಾಂಡಲ್‌ ಲಾಕ್‌ ಮುರಿದು ಕದ್ದು ಪರಾರಿ ಆಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಪ್ರಮೋದ ಲೇಔಟ್‌ನ ಶ್ರೀನಂದಿನಗರದಲ್ಲಿ ಜು.28ರ ಮುಂಜಾನೆ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದ ಮಾಲಿಕ ಅನಿಲ್‌ ಕುಮಾರ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಟ್ರ್ಯಾಕ್ಟರ್‌ ಪಲ್ಟಿ; ಮನೆಯವರಿಗೆ ಹೆದರಿ ಮಾಲೀಕ ನೇಣಿಗೆ ಶರಣು!

ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಅನಿÇ ಕುಮಾರ್‌, ಜು.27ರಂದು ರಾತ್ರಿ ಎಂದಿನಂತೆ ತಮ್ಮ ದ್ವಿಚಕ್ರ ವಾಹನವನ್ನು ಮನೆ ಎದುರು ನಿಲ್ಲಿಸಿದ್ದಾರೆ. ಮಾರನೇ ದಿನ ಮುಂಜಾನೆ 5.45ರ ಸುಮಾರಿಗೆ ಎದ್ದು ನೋಡಿದಾಗ ದ್ವಿಚಕ್ರ ವಾಹನ ಕಳ್ಳತನವಾಗಿರುವುದು ಗೊತ್ತಾಗಿದೆ. ಇಬ್ಬರು ದುಷ್ಕರ್ಮಿಗಳು ಜು.28ರ ಮುಂಜಾನೆ 3.30ರ ಸುಮಾರಿಗೆ ಹ್ಯಾಂಡಲ್‌ ಲಾಕ್‌ ಮುರಿದು ಅನಿಲ್‌ ಕುಮಾರ್‌ ಅವರ ದ್ವಿಚಕ್ರ ವಾಹನವನ್ನು ಕದ್ದಿದ್ದಾರೆ. ದ್ವಿಚಕ್ರ ವಾಹನ ಚಾಲು ಆಗಿಲ್ಲ, ಹಾಗಾಗಿ ಬೈಕನ್ನು ತಳ್ಳಿಕೊಂಡು ಪರಾರಿಯಾಗಿದ್ದಾರೆ. ದ್ವಿಚಕ್ರ ವಾಹನ ತಳ್ಳಿಕೊಂಡು ಹೋಗುತ್ತಿರುವ ದೃಶ್ಯಾವಳಿ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಸ್ತೆಯಿಂದ ಹಾರಿ ಮರಕ್ಕೆ ಕಾರು ಡಿಕ್ಕಿ; ಚಾಲಕ ಸಾವು

ಬೆಂಗಳೂರು ಅತಿವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾತಗುಣಿ ನಿವಾಸಿ ನಿಖಿಲ್‌ ಕುಮಾರ್‌(32) ಮೃತ ಚಾಲಕ. ಶನಿವಾರ ತಡರಾತ್ರಿ 12.30ರ ಸುಮಾರಿಗೆ ಕೆಂಗೇರಿ ಸಮೀಪದ ನೈಸ್‌ ರಸ್ತೆಯ ವೃಷಭಾವತಿ ಸೇತುವೆ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಬಹುತೇಕ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾವಣಗೆರೆ ಬೈಕ್‌ ಕಳವು ಪ್ರಕರಣ: ಇಬ್ಬರ ಬಂಧನ, 6 ಬೈಕ್‌ ಜಪ್ತಿ

ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ನಿಖಿಲ್‌ಕುಮಾರ್‌ ರಾತ್ರಿ ಮನೆಯಲ್ಲಿ ಊಟ ಮಾಡಿದ ಬಳಿಕ ಸ್ನೇಹಿತರನ್ನು ಭೇಟಿಯಾಗಿ ತಮ್ಮ ಐ-20 ಕಾರಿನಲ್ಲಿ ನೈಸ್‌ ರಸ್ತೆಯಲ್ಲಿ ಕನಕಪುರ ಕಡೆಯಿಂದ ಕೆಂಗೇರಿ ಕಡೆಗೆ ಬರುತ್ತಿದ್ದರು. ಈ ವೇಳೆ ನೈಸ್‌ ರಸ್ತೆಯ ವೃಷಭಾವತಿ ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಎಡ ಭಾಗದ ಕಾಲುವೆ ಹಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ನಿಖಿಲ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರು ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕೆಂಗೇರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.