ಕೊಪ್ಪಳ ಜಿಲ್ಲೆಯ ತಳಕಲ್ ಗ್ರಾಮದಲ್ಲಿ ಬೀದಿನಾಯಿಯೊಂದು ಶಾಲಾ ಆವರಣಕ್ಕೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ದಾಳಿ ನಡೆಸಿದೆ. 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕೊಪ್ಪಳ (ಆ.16): ಬೀದಿನಾಯಿಯೊಂದು ಶಾಲಾ ಆವರಣಕ್ಕೆ ಏಕಾಏಕಿ ನುಗ್ಗಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಕೆಲವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ನಿನ್ನೆಯಿಂದ ಈ ಬೀದಿನಾಯಿ ಗ್ರಾಮದಲ್ಲಿ ಓಡಾಡುತ್ತಿದ್ದು, ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮತ್ತು ಶಿಕ್ಷಕರ ಮೇಲೆ ದಾಳಿ ನಡೆಸಿದೆ. ಈ ದಾಳಿಯಿಂದ ವೃದ್ಧರು ಮಕ್ಕಳು ಸೇರಿದಂತೆ ಇಡೀ ಗ್ರಾಮಸ್ಥರೇ ಭಯಭೀತರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಗರಗಳಲ್ಲಿ ಬೀದಿನಾಯಿಗಳ ದಾಳಿಯ ಪ್ರಕರಣಗಳು ಹೆಚ್ಚಾಗಿದ್ದವು, ಆದರೆ ಇದೀಗ ಹಳ್ಳಿಗಳಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಗಾಯಾಳುಗಳಿಗೆ ತಕ್ಷಣವೇ ವೈದ್ಯಕೀಯ ಸಹಾಯ ಒದಗಿಸಲಾಗಿದ್ದು, ರೇಬಿಸ್ ಲಸಿಕೆಯನ್ನೂ ನೀಡಲಾಗಿದೆ.

ಗ್ರಾಮ ಪಂಚಾಯ್ತಿ ವಿರುದ್ಧ ಆಕ್ರೋಶ:

ಈ ಘಟನೆಯಿಂದ ಕೆರಳಿರುವ ಗ್ರಾಮಸ್ಥರು ಗ್ರಾಮ ಪಂಚಾಯತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಪಂಚಾಯತಿ ವಿಫಲವಾಗಿದೆ ಎಂದು ಆರೋಪಿಸಿ, ತಕ್ಷಣದ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.