ಶಹಾಪುರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ಹೆರಿಗೆಯಾದ ಘಟನೆ ನಡೆದಿದೆ. ಈ ಘಟನೆ ಶಾಲಾ ಆಡಳಿತದ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ಯಾದಗಿರಿ (ಆ.28): ಯಾದಗಿರಿ ಜಿಲ್ಲೆಯ ಶಹಾಪುರ ನಗರವೊಂದರ ವಸತಿಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ಬಾಲಕಿಯೊಬ್ಬಳು ಬುಧವಾರ ಮಧ್ಯಾಹ್ನ ವಸತಿಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಘಟನೆಯ ಅರಿವಿಗೆ ಬರುತ್ತಲೇ, ಬಾಲಕಿ ಹಾಗೂ ಮಗುವನ್ನು ಶಹಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಆರೋಗ್ಯದಿಂದ ಇದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಾಲಕಿ ಹೆರಿಗೆ ವಿಷಯವನ್ನು ಮೊದಲು ಗೌಪ್ಯವಾಗಿಟ್ಟ ಸ್ಥಳೀಯ ಅಧಿಕಾರಿಗಳು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ಬಂದಾಗ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ತೆರಳಿ, ವಿಸ್ಕೃತ ವರದಿ ಸಂಗ್ರಹಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ಏಷಿಯಾನೆಟ್ ಸುವರ್ಣನ್ಯೂಸ್‌ಗೆ ತಿಳಿಸಿದ್ದಾರೆ. ಈ ಮಧ್ಯೆ, ಬಾಲಕಿ ಗರ್ಭಿಣಿಯಾಗಿದ್ದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ವಸತಿಶಾಲೆಯ ಮುಖ್ಯಸ್ಥರು, ಪೋಷಕರನ್ನು ಸಂಪರ್ಕಿಸಿದ್ದಾರೆ. ಬಾಲ್ಯ ವಿವಾಹದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದು, ಈ ಆಘಾತಕಾರಿ ಘಟನೆಯು ವಸತಿ ಶಾಲೆಯ ಮೇಲ್ವಿಚಾರಕರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿಯ ಗೌಪ್ಯತೆ ಮತ್ತು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಶಾಲಾ ಆಡಳಿತದ ವೈಫಲ್ಯವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಾಳಜಿಯ ಕೊರತೆಯ ಬಗ್ಗೆ ಪ್ರಶ್ನೆಗಳೆದ್ದಿವೆ.

ಯಾದಗಿರಿ ಜಿಲ್ಲೆ ಶಹಾಪುರದ ವಸತಿ ನಿಲಯವೊಂದರಲ್ಲಿನ 9ನೇ ತರಗತಿ ಬಾಲಕಿ ಹೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ಶಾಲೆ ಪ್ರಾಚಾರ್ಯ, ವಾರ್ಡನ್, ವರ್ಗ ಶಿಕ್ಷಕಿ ಹಾಗೂ ಸ್ಟಾಫ್‌ ನರ್ಸ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದ್ದಾರೆ.