ಹಿಂದೂ ಹುಡುಗನ ತಂದೆ ನೀಡಿದ ದೂರಿನ ಆಧಾರದ ಮೇಲೆ ಕೋಮು ದ್ವೇಷವನ್ನು ಪ್ರಚೋದಿಸಿದ ಆರೋಪದ ಮೇಲೆ ಘಟನೆಗೆ ಕಾರಣವಾದ ಶಾಲಾ ಶಿಕ್ಷಕಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಭಾಲ್ (ಯುಪಿ): ಪ್ರಶ್ನೆಗೆ ಉತ್ತರಿಸದ ಹಿಂದೂ ಸಹಪಾಠಿಯನ್ನು ಕಪಾಳಮೋಕ್ಷ ಮಾಡಲು ಮುಸ್ಲಿಂ ವಿದ್ಯಾರ್ಥಿಗೆ ಆದೇಶಿಸಿದ ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಯುಪಿಯ ಸಂಭಾಲ್ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ದುಗಾವಾರ್ ಗ್ರಾಮದ ಖಾಸಗಿ ಶಾಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಇನ್ನು, ಈ ಪ್ರಕರಣ ಸಂಬಂಧ ಕೋಮು ದ್ವೇಷವನ್ನು ಪ್ರಚೋದಿಸಿದ ಆರೋಪದ ಮೇಲೆ ಘಟನೆಗೆ ಕಾರಣವಾದ ಶಾಲಾ ಶಿಕ್ಷಕಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ ಹುಡುಗನ ತಂದೆ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಶ್ರೀಶ್ ಚಂದ್ರು ಹೇಳಿದರು. ಆರೋಪಿ ಶಿಕ್ಷಕಿಯನ್ನು ಶಾಯಿಸ್ತಾ ಎಂದು ಗುರುತಿಸಲಾಗಿದೆ ಎಂದೂ ಅಧಿಕಾರಿ ತಿಳಿಸಿದ್ದಾರೆ. 

ಇದನ್ನು ಓದಿ: 45 ಮಹಿಳೆಯರ ರೇಪ್; ಶಿಕ್ಷಕಿ ಜತೆ ರಾಸಲೀಲೆ: ಕಾಮುಕ ಪ್ರಿನ್ಸಿಪಾಲ್ ವಿಡಿಯೋ ವೈರಲ್‌

ತನ್ನ ಮಗ ಶಾಲೆಯಲ್ಲಿ 5 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಅಲ್ಲಿ ತನ್ನ ತರಗತಿಯ ಶಿಕ್ಷಕಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದ ಕಾರಣ ಆತನಿಗೆ ಮುಸ್ಲಿಂ ವಿದ್ಯಾರ್ಥಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ ಎಂದು ಬಾಲಕನ ತಂದೆ ಆರೋಪಿಸಿದ್ದಾರೆ. ಇನ್ನು, ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಹೆಚ್ಚುವರಿ ಎಸ್ಪಿ ಶ್ರೀಶ್ ಚಂದ್ರು ತಿಳಿಸಿದ್ದಾರೆ. 

ಕಳೆದ ತಿಂಗಳು ಸಹ ಉತ್ತರ ಪ್ರದೇಶದ ಮುಜಾಫರ್‌ನಗರದ ಖುಬ್ಬಾಪುರ ಗ್ರಾಮದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಹೋಮ್‌ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಸಹಪಾಠಿಗಳಿಂದ ಮುಸ್ಲಿಂ ಮಗುವಿಗೆ ಕಪಾಳಮೋಕ್ಷ ಮಾಡಿಸಿದ್ದರು. ಆ ಪ್ರಕರಣದಲ್ಲಿ ಆರೋಪಿ ಶಿಕ್ಷಕಿ ತ್ರಿಪ್ತ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಪಾಕ್‌ಗೆ ಯಾಕೆ ಹೋಗ್ಲಿಲ್ಲ, ದೇಶದ ಸ್ವಾತಂತ್ರ್ಯಕ್ಕೆ ನಿಮ್ಮ ಕೊಡುಗೆ ಏನು ಎಂದು ವಿದ್ಯಾರ್ಥಿಗಳಿಗೆ ಕೇಳಿದ ಶಿಕ್ಷಕಿ!

ಮುಜಾಫರ್‌ನಗರ ಪ್ರಕರಣದಲ್ಲಿ ಅಸಮರ್ಪಕ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನಿರ್ದಿಷ್ಟ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ದಂಡ ವಿಧಿಸಲು ಪ್ರಯತ್ನಿಸಿದರೆ ಯಾವುದೇ ಗುಣಮಟ್ಟದ ಶಿಕ್ಷಣ ಸಾಧ್ಯವಿಲ್ಲ ಎಂದು ಸೆಪ್ಟೆಂಬರ್ 25 ರಂದು ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು. ಅಲ್ಲದೆ, ಈ ಪ್ರಕರಣದ ತನಿಖೆಗೆ ಒಂದು ವಾರದೊಳಗೆ ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಿಸುವಂತೆಯೂ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿ..!