ಹಾಸನದ ಅರಸೀಕೆರೆಯಲ್ಲಿ ಮಕ್ಕಳ ಜಗಳ ತಂದೆ-ತಾಯಿಯರ ನಡುವಿನ ಜಗಳಕ್ಕೆ ತಿರುಗಿ ಒಬ್ಬ ತಂದೆಯನ್ನು ಮತ್ತೊಬ್ಬ ತಂದೆ ಕೊಲೆ ಮಾಡಿದ್ದಾನೆ. ಕೊಲೆಯಾದವರ ಕುಟುಂಬಸ್ಥರು ಆರೋಪಿಯ ಮನೆಗೆ ಬೆಂಕಿ ಹಚ್ಚಿ, ಕಾರನ್ನು ಜಖಂಗೊಳಿಸಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ಹಾಸನ, (ಆ.30): ಇಬ್ಬರ ಮಕ್ಕಳ ನಡುವಿನ ಜಗಳದ ಕಾರಣಕ್ಕೆ ತಂದೆ-ತಾಯಿಯರ ನಡುವೆ ಜಗಳಕ್ಕೆ ಕಾರಣವಾಗಿ ಓರ್ವ ಮಗುವಿನ ತಂದೆಯಿಂದ ಇನ್ನೊರ್ವ ಮಗುವಿನ ತಂದೆಯನ್ನ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ, ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತೌಫಿಕ್ (28), ದುರ್ಘಟನೆಯಲ್ಲಿ ಕೊಲೆಯಾದ ವ್ಯಕ್ತಿ. ಫರಾನ್ ಕೊಲೆಗೈದ ವ್ಯಕ್ತಿ. ಈ ಘಟನೆಯಿಂದ ತೌಫಿಕ್‌ನ ಕುಟುಂಬಸ್ಥರು ರೊಚ್ಚಿಗೆದ್ದು, ಆರೋಪಿ ಫರಾನ್‌ನ ಮನೆಯ ಮೇಲೆ ದಾಳಿ ನಡೆಸಿ, ಮನೆ ಜಖಂಗೊಳಿಸಿ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ: 'ತಾಕತ್ ಇದ್ರೆ ಅಜಾನ್ ಬ್ಯಾನ್ ಮಾಡಿ..' ಡಿಜೆ ಅನುಮತಿ ಕೋರಿ ಪ್ರತಿಭಟನೆ, ರೇಣುಕಾಚಾರ್ಯ ವಿರುದ್ಧ FIR

ಪ್ರಕರಣದ ವಿವರ:

ಅರಸೀಕೆರೆ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ತೌಫಿಕ್ ಹಾಗೂ ಫರಾನ್‌ನ ಮಕ್ಕಳು ಆಗಸ್ಟ್ 25 ರಂದು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಈ ವಿಷಯವೇ ತಂದೆಯರಾದ ತೌಫಿಕ್ ಮತ್ತು ಫರಾನ್ ನಡುವೆ ಗೊಂದಲಕ್ಕೆ ಕಾರಣವಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಅರಸೀಕೆರೆಯ ಬಿಎಚ್ ರಸ್ತೆಯ ಲಸ್ಸಿ ಶಾಪ್‌ನಲ್ಲಿ ಎದುರುಬದರಾದ ಇಬ್ಬರು, ಮಕ್ಕಳ ಜಗಳದ ವಿಷಯವನ್ನು ಮತ್ತೆ ಕೆದಕಿದ್ದಾರೆ. ಈ ವೇಳೆ ಗಲಾಟೆ ತಾರಕಕ್ಕೇರಿದ್ದು, ಫರಾನ್ ತೌಫಿಕ್‌ನನ್ನು ತಳ್ಳಿದ್ದಾನೆ. ಇದರಿಂದ ಮೆಟ್ಟಿಲುಗಳ ಮೇಲೆ ಬಿದ್ದ ತೌಫಿಕ್ ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡ ತೌಫಿಕ್‌ನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 29 ರ ರಾತ್ರಿ ತೌಫಿಕ್ ಮೃತಪಟ್ಟಿದ್ದಾರೆ.

ಈ ಸಾವಿನಿಂದ ಕುಪಿತಗೊಂಡ ತೌಫಿಕ್‌ನ ಕುಟುಂಬಸ್ಥರು ಮತ್ತು ಸಂಬಂಧಿಕರು ಫರಾನ್‌ನ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಹತ್ತಾರು ಮಂದಿ ಜನರು ಫರಾನ್‌ನ ಮನೆಯನ್ನು ಜಖಂಗೊಳಿಸಿ, ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ತಡೆಗಟ್ಟಲು ಅರಸೀಕೆರೆ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಇದನ್ನೂ ಓದಿ: ಕಿತ್ತೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು, ಪೊಲೀಸ್ ಪೇದೆಗೆ ಚಾಕು ಇರಿದು ಪರಾರಿ ಯತ್ನ, ಆರೋಪಿ ಮೇಲೆ ಫೈರಿಂಗ್!

ಪ್ರಕರಣದ ಕುರಿತು ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಘಟನೆಯಿಂದ ಮುಜವಾರ್ ಮೊಹಲ್ಲಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.