ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಮತ್ತು ಶಿಕ್ಷಣ ತಜ್ಞ ಎನ್. ವಿನಯ್ ಹೆಗ್ಡೆ (86) ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಗ್ರಾಮೀಣ ಪ್ರದೇಶ ನಿಟ್ಟೆಯನ್ನು ಅಂತರಾಷ್ಟ್ರೀಯ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಅವರು, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೋದರರಾಗಿದ್ದರು.
ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ ಎಸ್ ಹೆಗ್ಡೆ ಹಾಸ್ಪಿಟಲ್ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ (86) ಇಂದು ಮಂಗಳೂರಿನ ಕದ್ರಿಯ ಶಿವಭಾಗ್ ನಿವಾಸದಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ವಿನಯ್ ಹೆಗ್ಡೆ ಅವರು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಸ್. ಹೆಗ್ಡೆ ಅವರ ದ್ವಿತೀಯ ಪುತ್ರ ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸೋದರರಾಗಿದ್ದಾರೆ.
ವಿನಯ್ ಹೆಗ್ಡೆ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು. ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರಾಗಿದ್ದಾರೆ. ನಿಟ್ಟೆ ಯೂನಿವರ್ಸಿಟಿ ರೂವಾರಿಯಾಗಿದ್ದರು.
