ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಶೋಕಾಚರಣೆ ಹಾಗೂ ನಾಯಕರ ಗೌರವಾರ್ಥ ಶಾಲೆಗಳಿಗೆ ರಜೆ ನೀಡಲಾಗಿದೆ.
ದಾವಣಗೆರೆ (ಡಿ.14) ಕಾಂಗ್ರೆಸ್ ಶಾಸಕ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಸ್ಪರ್ಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಮನೂರು ಶಿವಶಂಕರಪ್ಪ ಇಂದು ಸಂಜೆ ನಿಧನರಾಗಿದ್ದಾರೆ. 95 ವರ್ಷದ ಕಾಂಗ್ರೆಸ್ ನಾಯಕ ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ಶಾಮನೂರು ಶಿವಶಂಕರಪ್ಪ ಅಗಲಿಕೆಯಿಂದ ದಾವಣೆಗೆರೆ ಜಿಲ್ಲಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಡಿ.15ಕ್ಕೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿರುವ ಕಾರಣ ಅವರ ಗೌರವಾರ್ಥವಾಗಿ ದಾವಣೆಗೆರೆ ಜಿಲ್ಲಾಧಿಕಾರಿಗಳು ನಾಳೆ (ಡಿ.15) ದಾವಣಗೆರೆ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಈ ರಜೆಯನ್ನು ಮುದಿನ ಶನಿವಾರ (ಡಿಸೆಂಬರ್ 27) ರಂದು ಪೂರ್ತಿ ದಿನ ಶಾಲೆ ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.
ದಾವಣೆಗರೆ ವಿವಿಯ ಹಲವು ಪರೀಕ್ಷೆಗಳು ಮುಂದೂಡಿಕೆ
ದಾವಣಗೆರೆ ವಿಶ್ವವಿದ್ಯಾಲಯದ ವ್ಯಾಪ್ತಿಯಡಿಯಲ್ಲಿರುವ ಹಲವು ಕಾಲೇಜುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ರಾತ್ರಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಬೆಂಗಳೂರಿನ ಮಹಾಸಭಾ ಬಳಿ ಅರ್ಧ ಗಂಟೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ದಾವಣೆಗೆರೆ ಕೊಂಡೊಯ್ಯಲಾಗುತ್ತದೆ. ದಾವಣಗೆರೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬಳಿಕ ದಾವಣೆಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಗಣ್ಯರ ಕಂಬನಿ
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷ ನಾಯಕ ಆರ್ ಅಶೋಕ್, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಇತ್ತ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಕೇಂದ್ರ ನಾಯಕರು ಸಂತಾಪ ಸೂಚಿಸಿದ್ದಾರೆ.


