ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ವಿಜಯನಗರದಲ್ಲಿರುವ ಆದಿಚುಂಚನಗಿರಿ ಕಾಂಪ್ಲೆಕ್ಸ್ ಬಳಿ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿಯನ್ನು ಬಂಧಿತ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಎಸ್‌ಐಟಿ ಅಧಿಕಾರಿಗಳ ಬಳಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ವಿಜಯನಗರದಲ್ಲಿರುವ ಆದಿಚುಂಚನಗಿರಿ ಕಾಂಪ್ಲೆಕ್ಸ್ ಬಳಿ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿಯನ್ನು ಬಂಧಿತ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಎಸ್‌ಐಟಿ ಅಧಿಕಾರಿಗಳ ಬಳಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಎಸ್‌ಐಟಿ ಅಧಿಕಾರಿಗಳು ಆರೋಪಿ ನವೀನ್ ಕುಮಾರ್‌ನನ್ನು ತಮ್ಮ ವಶಕ್ಕೆ ಪಡೆಯುವ ಸಲುವಾಗಿ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮ್ಯಾಂಡ್ ಅರ್ಜಿಯಲ್ಲಿ (ಆರೋಪಿಯನ್ನು ತಮ್ಮ ವಶಕ್ಕೆ ಪಡೆಯಲು ಏನು ಕಾರಣ ಎಂದು ನ್ಯಾಯಾಲಯಕ್ಕೆ ವಿವರಿಸಿರುವ ಅರ್ಜಿ) ಈ ವಿಷಯವನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಗೌರಿ ಲಂಕೇಶ್ ತಮ್ಮ ‘ಲಂಕೇಶ್ ಪತ್ರಿಕೆ’ಯಲ್ಲಿ ಹಿಂದುಪರ ಸಂಘಟನೆ ನಾಯಕರ ವಿರುದ್ಧ ಸುದ್ದಿ ಬರೆಯುತ್ತಿದ್ದರು. ಇದರಿಂದ ಹಿಂದುಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ಅವರ ಹತ್ಯೆಗೆ ವಿಜಯನಗರ ಆದಿಚುಂಚ ನಗಿರಿ ಕಾಂಪ್ಲೆಕ್ಸ್ ಬಳಿ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎಂದು ಆರೋಪಿ ಹೇಳಿಕೆ ನೀಡಿದ್ದ.

ಬಂಧನದ ಬಳಿಕ ಎಸ್‌ಐಟಿ ಅಧಿಕಾರಿಗಳು ನವೀನ್ ಕುಮಾರ್‌ನನ್ನು ಸ್ಥಳಕ್ಕೆ ಕರೆದೊಯ್ಯುವಂತೆ ಸೂಚಿಸಿದ್ದರು. ಈ ಜಾಗಕ್ಕೆ ಕರೆದೊಯ್ದಿದ್ದ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಎಸ್‌ಐಟಿ ಅಧಿಕಾರಿ ಗಳು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.