ಕಾಂಗ್ರೆಸ್‌ನ ಉಚ್ಚಾಟಿತ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಬಿಜೆಪಿ ಸೇರ್ಪಡೆ ಸತ್ಯಕ್ಕೆ ದೂರ. ಈ ಬಗ್ಗೆ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿಠಲ ಕಟಕದೊಂಡ ಸ್ಪಷ್ಟಪಡಿಸಿದರು.

ವಿಜಯಪುರ: ಕಾಂಗ್ರೆಸ್‌ನ ಉಚ್ಚಾಟಿತ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಬಿಜೆಪಿ ಸೇರ್ಪಡೆ ಸತ್ಯಕ್ಕೆ ದೂರ. ಈ ಬಗ್ಗೆ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿಠಲ ಕಟಕದೊಂಡ ಸ್ಪಷ್ಟಪಡಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಎಲ್ಲೂ ಸಹ ನಡಹಳ್ಳಿ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಡಹಳ್ಳಿ, ಪಕ್ಷದ ರಾಜ್ಯ ಅಥವಾ ರಾಷ್ಟ್ರೀಯ ಅಧ್ಯಕ್ಷರನ್ನು ಸಂಪರ್ಕಿಸಿರಬಹುದು. ನನ್ನನ್ನು ಸಂಪರ್ಕಿಸಿಲ್ಲ. ಒಂದೊಮ್ಮೆ ನಡಹಳ್ಳಿರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಸಮ್ಮತಿ ಸೂಚಿಸಿದರೆ ತಮ್ಮದೇನೂ ತಕರಾರು ಇಲ್ಲ. ವರಿಷ್ಠರ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದಷ್ಟೇ ಹೇಳಿದ್ದೆ.

ಆದರೆ ನಡಹಳ್ಳಿ ಸೇರ್ಪಡೆಗೆ ನನ್ನ ಸಮ್ಮತಿ ಇದೆ ಎಂದು ಎಲ್ಲಿಯೂ ನೇರವಾಗಿ ಹೇಳಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ‘ಆದರೆ, ನನ್ನ ಹೇಳಿಕೆಯನ್ನು ತಿರುಚಿ ನಾನು ನೇರವಾಗಿ ಹೇಳಿದಂತೆ ಮಾಡಿರುವ ವಿಡಿಯೋ ವೈರಲ್‌ ಆಗಿದೆ. ಇದು ಸರಿಯಲ್ಲ’ ಎಂದು ಹೇಳಿದರು.

ಮುಖಂಡ ಆರ್‌.ಎಸ್‌.ಪಾಟೀಲ ಕೂಚಬಾಳ ಮಾತನಾಡಿ, ನಡಹಳ್ಳಿ ಬಿಜೆಪಿ ಸೇರ್ಪಡೆಗೆ ನಾವು ಅವಕಾಶ ನೀಡುವುದಿಲ್ಲ. ಬಿಜೆಪಿ ಆಕಾಂಕ್ಷಿಗಳೆಲ್ಲರೂ ಒಟ್ಟಾಗಿದ್ದು ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲಿದ್ದೇವೆ. ಯಾವುದೇ ಕಾರಣಕ್ಕೂ ಪಕ್ಷಾಂತರಿಗಳನ್ನು ಬಿಜೆಪಿಗೆ ತೆಗೆದುಕೊಳ್ಳಬಾರದೆಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.