‘ಚಂದನ’ ದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ಸೇತುಬಂಧ ಕಾರ್ಯಕ್ರಮ
ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ಸೇತುಬಂಧ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಗಳನ್ನು ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಬೆಂಗಳೂರು (ಜು. 09): ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ಸೇತುಬಂಧ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಗಳನ್ನು ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಬುಧವಾರ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯದಲ್ಲಿ (ಡಿಎಸ್ಇಆರ್ಟಿ) ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಪ್ರಸ್ತುತ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲೂ ಶೇ.35 ಪಠ್ಯ ಕಡಿತಕ್ಕೆ ಚಿಂತನೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುಳಿವು
ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದುವ ಮಕ್ಕಳಿಗೆ ಹಿಂದಿನ ತರಗತಿಗಳ ಕಲಿಕೆಯನ್ನು ನೆನಪಿಸಿ ಮುಂದಿನ ತರಗತಿಗಳಿಗೆ ಸಿದ್ಧಗೊಳಿಸುವುದೇ ಸೇತುಬಂಧ ಕಾರ್ಯಕ್ರಮವಾಗಿದೆ. ಕೆಲವೇ ದಿನಗಳಲ್ಲಿ 8ರಿಂದ 10ನೇ ತರಗತಿಯ ಸೇತುಬಂಧ ವೀಡಿಯೋ ತರಗತಿಗಳು ಚಂದನ ವಾಹಿನಿಯಲ್ಲಿ ಆರಂಭಗೊಳ್ಳಲಿವೆ. ಆ ನಂತರ ಇಂಗ್ಲಿಷ್ ಮಾಧ್ಯಮಗಳಲ್ಲೂ ಈ ತರಗತಿಗಳ ಪಾಠಗಳನ್ನು ಪ್ರಾರಂಭಿಸಲಾಗುವುದು ಎಂದರು.
ಹೊಸ ಸ್ಟೂಡಿಯೋ ಆರಂಭ:
ಇದಕ್ಕಾಗಿಯೇ ಇಲಾಖೆ ವತಿಯಿಂದ ಪ್ರತ್ಯೇಕ ಚಾನಲ್ ಪ್ರಾರಂಭಿಸುವ ಪ್ರಯತ್ನಗಳು ನಡೆಯುತ್ತಿವೆ. ಹಾಗೆಯೇ ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳ ಸದ್ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.