Breaking: ಕರ್ನಾಟಕದಲ್ಲಿ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದು
2019-20ನೇ ಸಾಲಿನ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗಳನ್ನ ಕರ್ನಾಟಕದಲ್ಲಿ ರದ್ದು ಮಾಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, (ಜುಲೈ.10): ಕರ್ನಾಟಕದಲ್ಲಿ ಎಂಜಿನಿಯರಿಂಗ್, ಪದವಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ, ಅಂತಿಮ ಪರೀಕ್ಷೆಗಳು ಮಾತ್ರ ನಡೆಯಲಿವೆ
ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ.
ಸ್ಮಾರ್ಟ್ ಫೋನ್, ಟಿವಿ ಬದಲು ಮಕ್ಕಳಿಗೆ ರೇಡಿಯೋ ಕೊಡಲಿ: ವೈರಲ್ ಆಯ್ತು ಐಡಿಯಾ!
ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ.
ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ.
ಉನ್ನತ ಶಿಕ್ಷಣ ಸಚಿವರ ಸ್ಪಷ್ಟನೆ
ಈ ಬಗ್ಗೆ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಸ್ಪಷ್ಟಪಡಿಸಿದರು.
ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ಆನ್ಲೈನ್ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು ಎಂದು ಹೇಳಿದರು.
ಅಂತಿಮ ವರ್ಷ/ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್ಲೈನ್/ಆಪ್ಲೈನ್) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.
ತೇರ್ಗಡೆ ಮಾಡುವುದು ಹೇಗೆ?:
ಮಧ್ಯಂತರ ಸೆಮಿಸ್ಟರ್/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್ಲಾಗ್ ವಿಷಯಗಳ ಕ್ಯಾರಿ ಓವರ್ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು.
ಏನೇ ಅನುಮಾನಗಳು ಇದ್ದರೂ ಈ ಹೆಲ್ಪ್ ಲೈನ್ ಸಂಖ್ಯೆ 080 22341394 ಕರೆ ಮಾಡಬಹುದು ಎಂದು ತಿಳಿಸಿದರು.
ಅಂತಿಮ ಸೆಮಿಸ್ಟರ್ ಪರೀಕ್ಷೆ ಏಕೆ?:
ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಸೆಪ್ಟೆಂಬರ್ 1ರಿಂದ ಆನ್ಲೈನ್ ತರಗತಿ
2020-21ರ ಶೈಕ್ಷಣಿಕ ಸಾಲಿನ ಸೆಪ್ಟೆಂಬರ್ 1 ರಿಂದಲೇ ಆನ್ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದರು.