ಶಾಲೆಗಳ ಪುನರ್ ಆರಂಭ ಇಲ್ಲ/ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ/   ಜುಲೈ 13 ರಿಂದ ಎಸ್‌ಎಸ್‌ಎಲ್ ಸಿ ಮೌಲ್ಯ ಮಾಪನ/ ಜುಲೈ 18 ರೊಳಗೆ ಪಿಯು ಫಲಿತಾಂಶ

ಮಂಗಳೂರು(ಜು. 11) ರಾಜ್ಯದಲ್ಲಿ ಶಾಲೆಗಳ ಪುನರ್ ಆರಂಭದ ಕುರಿತು ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಕುಮಾರ್, ಕೊರೋನಾ ಮಹಾಮಾರಿ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕವೇ ಶಾಲೆಗಳ ಪುನರ್ ಆರಂಭದ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಕಾಲಿನಲ್ಲೇ ಸಚಿವ ಸುರೇಶ್ ಕುಮಾರ್ ಹೆಸರು ಬರೆದ ಕೌಶಿಕ್

ರಾಜ್ಯದಲ್ಲಿ SSLC ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜುಲೈ 13 ರಿಂದ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹೇಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ ಅದೇ ರೀತಿಯ ಸುರಕ್ಷತೆಯನ್ನು ಮೌಲ್ಯಮಾಪನಾ ಕೇಂದ್ರಗಳಲ್ಲೂ ಕೈಗೊಳ್ಳಲಾಗುವುದು ಎಂದು ತಿಳಿಸಿದರು/.

ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 18 ಒಳಗೆ ಬರುವ ಸಾಧ್ಯತೆಯಿದೆ. ಆನ್ ಲೈನ್ ಶಿಕ್ಷಣಕ್ಕಾಗಿ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಗೆ ಲ್ಯಾಪ್ ಟಾಪ್ ಖರೀದಿಸುವಂತೆ ಒತ್ತಡ ಹೇರುತ್ತಿರುವ ದೂರುಗಳು ಬಂದಿದ್ದು, ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿದಂತೆ ಜುಲೈ 14 ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಗ್ರಾಮೀಣ ಭಾಗದಲ್ಲಿ ಕಷ್ಟಸಾಧ್ಯವಾಗಿದ್ದು, ದೂರದರ್ಶನ ಶಿಕ್ಷಣದ ಮೂಲಕ ಶಿಕ್ಷಣ ನೀಡುವ ಯೋಜನೆಯೂ ಸರ್ಕಾರದ ಮುಂದಿದೆ ಎಂದು ತಿಳಿಸಿದರು.