ದ್ವಿತೀಯ ಪಿಯು ಪೂರಕ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ
ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಫೇಲ್ ಆದವರಿಗೆ ಪೂರಕ ಪರೀಕ್ಷೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ಮಾಡಲಾಗಿದೆ.
ಬೆಂಗಳೂರು, (ಜುಲೈ.14): ಇಂದು (ಮಂಗಳವಾರ) ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ಹಾಜರಾಗಿದ್ದ 6,75,277 ವಿದ್ಯಾರ್ಥಿಗಳ ಪೈಕಿ 4,17,297 ಮಂದಿ ಉತ್ತೀರ್ಣರಾಗಿದ್ದಾರೆ.
ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಂದಿನ ತಿಂಗಳು ಅಂದರೆ ಆಗಸ್ಟ್ನಲ್ಲಿ ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಜುಲೈ ಕೊನೇ ವಾರದಲ್ಲಿ ವೇಳಾಪಟ್ಟಿ ಪ್ರಕಟವಾಗಲಿದೆ.
ದ್ವಿತೀಯ ಪಿಯುಸಿ ರಿಸಲ್ಟ್: ಡಿಸ್ಟಿಂಕ್ಷನ್ನಲ್ಲಿ ಪಾಸಾದ್ರೂ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ಪೂರಕ ಪರೀಕ್ಷೆಯ ಶುಲ್ಕ ಪಾವತಿಸಲು ಜು.31 ಕೊನೇ ದಿನ. ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಆ. 3ರೊಳಗೆ ಕಳುಹಿಸಬೇಕಿದೆ.
ಕಾಲೇಜಿನವರು ಆ.5ರೊಳಗೆ ಉಪನಿರ್ದೇಶಕರ ಕಚೇರಿಗೆ ಚಲನ್ ಸಹಿತ ಶುಲ್ಕ ಪಾವತಿಸಬೇಕು. ಪ್ರತಿ ವಿಷಯಕ್ಕೆ 140 ರೂ, ಎರಡು ವಿಷಯಕ್ಕೆ 270, ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ 470 ರೂ.ಗಳು. ಎಸ್ಸಿ-ಎಸ್ಟಿ ಪ್ರವರ್ಗ 1ರ ವಿದ್ಯಾರ್ಥಿಗಳು 50 ರೂ. ಶುಲ್ಕ ಕಟ್ಟಬೇಕು.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2020: ರಾಜ್ಯಕ್ಕೆ ಇವರೇ ಟಾಪರ್ಸ್..!
ಮರು ಮೌಲ್ಯಮಾಪನ
ಇನ್ನು ಫಲಿತಾಂಶ ತೃಪ್ತಿಯಾಗದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಪಡೆಯಲು, ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಹಾಗೂ ಅಂಕಗಳ ಮರು ಏಣಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಜು.16ರಿಂದ ಜು.30ರವರೆಗೆ ಅವಕಾಶ ಕಲ್ಪಿಸಿದೆ. ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿ ಪಡಿಸಲಾಗಿದೆ.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಆ. 3ರಿಂದ 7ರವರೆಗೆ ಅವಕಾಶ ನೀಡಲಾಗಿದೆ. ಮರುಮೌಲ್ಯಮಾಪನಕ್ಕೆ ಮತ್ತು ಮರು ಏಣಿಕೆಗಾಗಿ ಆ.4ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದು. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ನಿಗದಿ ಮಾಡಲಾಗಿದೆ.