* ಪದವಿ, ಡಿಪ್ಲೊಮೊ ಬಾಕಿ ಪರೀಕ್ಷೆಗೆ ಡೆಡ್‌ಲೈನ್ ನೀಡಿದ ಅಶ್ವತ್ಥ್ ನಾರಾಯಣ* ಅಗಸ್ಟ್‌ ಮತ್ತು ಅಕ್ಟೋಬರ್‌ ತಿಂಗಳ ಒಳಗಾಗಿ ಮುಗಿಸಬೇಕೆಂದು ಸೂಚನೆ* ಕಾಲೇಜು ಆರಂಭ ಬಗ್ಗೆಯೂ ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರು, (ಜು.16): ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್‌ ಮತ್ತು ಅಕ್ಟೋಬರ್‌ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಎಲ್ಲ ವಿಶ್ವವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಪರೀಕ್ಷೆಗಳನ್ನು ನಡೆಸುವ ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಪ್ಲೊಮೊ ತರಗತಿಗಳ 1, 3 ಮತ್ತು 5 ನೇ ಸೆಮಿಸ್ಟರ್‌ಗಳ ಪ್ರಾಯೋಗಿಕ ಪರೀಕ್ಷೆಗಳು ಹಾಗೂ ಬಾಕಿ ಉಳಿದಿರುವ ಥಿಯರಿ ಪರೀಕ್ಷೆಗಳನ್ನು ಅಗಸ್ಟ್‌ ಒಳಗೆ ಮುಗಿಸಬೇಕು ಹಾಗೂ ಪದವಿ ಪರೀಕ್ಷೆಗಳನ್ನು ಅಕ್ಟೋಬರ್‌ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಎಲ್ಲ ಪರೀಕ್ಷೆಗಳಲ್ಲೂ ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯ. ದೈಹಿಕ ಅಂತರ, ಮಾಸ್ಕ್‌ ಧರಿಸುವುದನ್ನು ತಪ್ಪಿಸುವಂತಿಲ್ಲ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಪಾಸಿಟೀವ್‌ ಬಂದಿದ್ದರೆ ಅಂಥರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಹುತೇಕ ಎಲ್ಲ ವಿವಿಗಳು ಪರೀಕ್ಷೆಗಳನ್ನು ಮುಗಿಸಿದ್ದು, ಕೋವಿಡ್‌ ಲಾಕ್‌ಡೌನ್‌ ಕಾರಣಕ್ಕೆ ಕರ್ನಾಟಕ ವಿವಿ, ಕಲಬುರಗಿ ವಿವಿ, ಬೆಂಗಳೂರು ವಿವಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಅವರು ಕೂಡ ಈಗ ಪರೀಕ್ಷೆಗಳನ್ಜು ನಡೆಸಬಹುದು ಎಂದರು.

ಕಾಲೇಜು ಆರಂಭ ಬಗ್ಗೆ ಡಿಸಿಎಂ ಪ್ರತಿಕ್ರಿಯೆ
ಉನ್ನತ ಶಿಕ್ಷಣ ವಿಭಾಗದ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದರು.

ಈಗಾಗಲೇ ಶೇ. 75 ರಷ್ಟು ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ತೆಗೆದುಕೊಂಡರೆ ಶೇ.65 ರಷ್ಟು ವಿದ್ಯಾರ್ಥಿಗಳು ವ್ಯಾಕ್ಸಿನ್‌ ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಶೀಘ್ರವೇ ನೀಡಲಾಗುವುದು. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಲಸಿಕೀಕರಣ ಭರದಿಂದ ಸಾಗುತ್ತಿದೆ ಎಂದರು.

ಆಫ್‌ಲೈನ್‌ ಕ್ಲಾಸ್‌ ಕಡ್ಡಾಯ ಅಲ್ಲ. ಇಷ್ಟ ಇದ್ದವರು ಲಸಿಕೆ ಪಡೆದು ಬರಬಹುದು, ಇಲ್ಲದವರು ಆನ್‌ಲೈನ್‌ ಕ್ಲಾಸ್‌ನಲ್ಲಿ ಪಾಠ ಕೇಳಬಹುದು. ಆದರೆ, ಹಾಜರಿ ಮಾತ್ರ ಕಡ್ಡಾಯ. ಮೇ ತಿಂಗಳಿಂದಲೇ ಆನ್‌ಲೈನ್‌ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಜತೆಗೆ, ಸಂಪರ್ಕ ತರಗತಿಗಳೂ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.