ಈಗಾಗಲೇ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳಿಗೆ ತಲುಪುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಇನ್ನು ಎರಡು ದಿನಗಳಲ್ಲಿ ಪಠ್ಯ ಪರಿಷ್ಕರಣೆ ವಿಚಾರವಾಗಿ ಸ್ಪಷ್ಟಚಿತ್ರಣ ನೀಡುವುದಾಗಿ ತಿಳಿಸಿದ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ 

ಬೆಂಗಳೂರು(ಮೇ.31): ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ಬದಲಾವಣೆ ಮಾಡಿರುವ ವಿಷಯಗಳನ್ನು ಮರು ಪರಿಷ್ಕರಿಸಲು ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಸಮಿತಿಯೊಂದನ್ನು ರಚಿಸಲು ಮುಂದಾಗಿದೆ.

Add Asianetnews Kannada as a Preferred SourcegooglePreferred

ಸ್ವತಃ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಈ ಮಾಹಿತಿ ನೀಡಿದ್ದು, ಈಗಾಗಲೇ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳಿಗೆ ತಲುಪುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಇನ್ನು ಎರಡು ದಿನಗಳಲ್ಲಿ ಪಠ್ಯ ಪರಿಷ್ಕರಣೆ ವಿಚಾರವಾಗಿ ಸ್ಪಷ್ಟಚಿತ್ರಣ ನೀಡುವುದಾಗಿ ತಿಳಿಸಿದ್ದಾರೆ.

ರಾಜ್ಯಾದ್ಯಂತ 27 ಸಾವಿರ ಅತಿಥಿ ಶಿಕ್ಷಕರ ನೇಮಕ: ಜಿಲ್ಲಾವಾರು ಹುದ್ದೆಗಳ ವಿವರ ಇಲ್ಲಿದೆ..

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆಯೂ ಒಂದು ಪ್ರಮುಖ ಅಂಶವಾಗಿದೆ. ಅದರಂತೆ ನಮ್ಮ ಸರ್ಕಾರ ಪಠ್ಯಪುಸ್ತಕಗಳ ಮರು ಪರಿಷ್ಕರಣೆ ಮಾಡಲಿದೆ. ಬಿಜೆಪಿ ಅಧಿಕಾರಾವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳಲ್ಲಿ ತಂದಿರುವ ಬದಲಾವಣೆಗಳನ್ನು ಮರುಪರಿಶೀಲಿಸಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಶೀಘ್ರದಲ್ಲೇ ನನಗೊಂದು ಸಮಿತಿ ನೀಡುವುದಾಗಿ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ’ ಎಂದರು.

‘ಆದರೆ, ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಿಂದ ಮಕ್ಕಳಲ್ಲಿ ಗೊಂದಲ, ಅವರ ವಿದ್ಯಾಭ್ಯಾಸ ಮೇಲೆ ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆಯ ಕ್ರಮ ವಹಿಸಲಾಗುವುದು. ಶಾಲೆಗಳು ಪುನಾರಂಭಕ್ಕೆ ಸಿದ್ಧವಾಗಿರುವುದರಿಂದ ಮತ್ತು ಈಗಾಗಲೇ ಬಹುತೇಕ ಪುಸ್ತಕಗಳು ಮುದ್ರಣಗೊಂಡು ಶಾಲೆಗಳನ್ನು ತಲುಪಿರುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಪರಿಷ್ಕರಣೆಯ ಬಗ್ಗೆ ಚಿಂತಿಸಬೇಕಾಗಿಲ್ಲ. ಏಕೆಂದರೆ ಯಾವುದೇ ಅಧ್ಯಾಯವನ್ನು ಬೋಧನೆಯಿಂದ ಕೈಬಿಡುವುದಾದರೆ ಶಿಕ್ಷಕರಿಗೆ ಪ್ರತ್ಯೇಕವಾಗಿ ಸೂಚನೆಗಳನ್ನು ನೀಡಲಾಗುವುದು. ಈ ಮರು ಪರಿಷ್ಕರಣೆಯ ಕಾರ್ಯ ಹೇಗೆ ಮಾಡುವುದು ಎಂಬ ಬಗ್ಗೆ ಜೂ.1ರ ಸಚಿವ ಸಂಪುಟ ಸಭೆಯ ಬಳಿಕ ಸ್ಪಷ್ಟಚಿತ್ರಣ ನೀಡುತ್ತೇವೆ’ ಎಂದು ಹೇಳಿದರು.

ಹಾಜರಾತಿ ಕೊರತೆ ಇದ್ದ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಅವಕಾಶ

ಬಿಜೆಪಿ ಸರ್ಕಾರದಲ್ಲಿ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯಿಂದ ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬುದ್ಧಿಜೀವಿಗಳು ಮತ್ತು ಸಾಹಿತಿಗಳು ಸೋಮವಾರವಷ್ಟೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಮಕ್ಕಳಿಗೆ ಗೊಂದಲ ಆಗದಂತೆ ಪರಿಷ್ಕರಣೆ

ಪಠ್ಯ ಮರು ಪರಿಷ್ಕರಣೆಯಿಂದ ಮಕ್ಕಳಲ್ಲಿ ಗೊಂದಲ ಆಗದಂತೆ ಕ್ರಮ ವಹಿಸುತ್ತೇವೆ. ಈಗಾಗಲೇ ಪಠ್ಯಪುಸ್ತಕಗಳು ಮುದ್ರಣಕ್ಕೆ ಹೋಗಿವೆ. ಪಾಠ ಕೈಬಿಡುವುದಾದರೆ ಶಿಕ್ಷಕರಿಗೆ ಪ್ರತ್ಯೇಕವಾಗಿ ತಿಳಿಸಲಾಗುವುದು. ಮಕ್ಕಳು, ಪೋಷಕರು ಚಿಂತಿಸುವ ಅಗತ್ಯವಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.