ಹಾವೇರಿಯ ಮೊರಾರ್ಜಿ ವಸತಿ ಶಾಲೆಯಿಂದ ಐವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಏಕಾಏಕಿ ನಾಪತ್ತೆಯಾಗಿದ್ದಾರೆ. ಪರೀಕ್ಷೆಯ ಭಯದಿಂದ ವಿದ್ಯಾರ್ಥಿಗಳು ಶಾಲೆಯ ಕಾಂಪೌಂಡ್ ಹಾರಿ ಪರಾರಿಯಾಗಿರಬಹುದೆಂದು ಶಂಕಿಸಲಾಗಿದ್ದು, ಅಧಿಕಾರಿಗಳ ಗೊಂದಲಕಾರಿ ಹೇಳಿಕೆಗಳಿಂದ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಹಾವೇರಿ: ಪರೀಕ್ಷೆಗಳ ಭಯದಿಂದಾಗಿ ಏಕಾಏಕಿ ಐವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲ್–ಬಿದರಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ವೇಳೆ, ಇಂದು ಬೆಳಗಿನ ಜಾವ ವಿದ್ಯಾರ್ಥಿಗಳು ವಸತಿ ಶಾಲೆಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪರೀಕ್ಷೆಗಳ ಒತ್ತಡವೇ ನಾಪತ್ತೆಗೆ ಕಾರಣ?

ನಾಪತ್ತೆಯಾಗಿರುವ ಐವರು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಭಯ ಕಾಡುತ್ತಿತ್ತು ಎಂದು ಹೇಳಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ, ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಿದ್ದು, ಅದೇ ಕಾರಣಕ್ಕೆ ಅವರು ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ವಸತಿ ಶಾಲೆಯಲ್ಲಿನ ಭದ್ರತಾ ಕೊರತೆ

ಘಟನೆ ನಡೆದ ರಾತ್ರಿ ವಸತಿ ಶಾಲೆಯಲ್ಲಿ ವಾಚ್‌ಮ್ಯಾನ್ ಹಾಜರಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬೆಳಗಿನ ನಸುಕಿನ ಜಾವ ಮಕ್ಕಳು ಕಾಂಪೌಂಡ್ ಹಾರಿ ಹೊರಗೆ ಹೋಗಿರುವುದು ಭದ್ರತಾ ವ್ಯವಸ್ಥೆಯ ಮೇಲೆಯೇ ಪ್ರಶ್ನೆಗಳನ್ನು ಎಬ್ಬಿಸಿದೆ. ವಸತಿ ಶಾಲೆಯಲ್ಲಿನ ಮೇಲ್ವಿಚಾರಣೆ ಹಾಗೂ ಮಕ್ಕಳ ಸುರಕ್ಷತೆ ಕುರಿತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಪರಸ್ಪರ ವಿರೋಧಿ ಹೇಳಿಕೆಗಳು

ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ಸಿಗದೆ ಗೊಂದಲ ನಿರ್ಮಾಣವಾಗಿದೆ. ವಸತಿ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್ ಅಕ್ಕುವಳ್ಳಿ ಅವರು, “ಮಕ್ಕಳು ಸುರಕ್ಷಿತವಾಗಿದ್ದಾರೆ, ಪತ್ತೆಯಾಗಿದ್ದಾರೆ” ಎಂದು ಹೇಳಿರುವರೆಂದು ತಿಳಿದುಬಂದಿದೆ. ಆದರೆ ಮತ್ತೊಂದೆಡೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಬ್ದುಲ್ ಮಿರ್ಜಾನವರ ಅವರು ಮಾಧ್ಯಮಗಳಿಗೆ “ಮಕ್ಕಳು ಬೇರೆ ಕಡೆ ಇದ್ದಾರೆ” ಎಂಬ ಅಸ್ಪಷ್ಟ ಉತ್ತರ ನೀಡಿದ್ದಾರೆ. ಇದರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿಗಳ ಮಾಹಿತಿ ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆಯೇ ಎಂಬ ಅನುಮಾನವೂ ಮೂಡಿದೆ.

ಮಕ್ಕಳ ಪತ್ತೆಗೆ ಶೋಧ ಕಾರ್ಯ

ಪ್ರಸ್ತುತ ವಸತಿ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್ ಅಕ್ಕುವಳ್ಳಿ ಅವರು ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿದುಬಂದಿದೆ. ಸ್ಥಳೀಯರು, ಶಾಲಾ ಸಿಬ್ಬಂದಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಕ್ಕಳ ಸುಳಿವು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ಪೋಷಕರ ಆತಂಕ, ಇಲಾಖೆಯ ಮೇಲೆ ಒತ್ತಡ

ಪರೀಕ್ಷೆಗಳ ಒತ್ತಡದಿಂದ ಮಕ್ಕಳು ಪರಾರಿಯಾಗಿರುವುದು ಶಿಕ್ಷಣ ವ್ಯವಸ್ಥೆಯಲ್ಲಿನ ಮಾನಸಿಕ ಒತ್ತಡದ ಗಂಭೀರತೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದೆ. ಪೋಷಕರು ಮಕ್ಕಳ ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಶಾಲಾ ಆಡಳಿತ ಸ್ಪಷ್ಟ ಮಾಹಿತಿ ನೀಡಬೇಕು ಎಂಬ ಒತ್ತಾಯ ಜೋರಾಗಿದೆ. ಈ ಘಟನೆ, ವಸತಿ ಶಾಲೆಗಳಲ್ಲಿನ ಭದ್ರತೆ, ವಿದ್ಯಾರ್ಥಿಗಳ ಮಾನಸಿಕ ಆರೈಕೆ ಹಾಗೂ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತು ಗಂಭೀರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಮಕ್ಕಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಸುರಕ್ಷಿತವಾಗಿ ಮನೆಗೆ ಕರೆತರುವುದೇ ಇದೀಗ ಎಲ್ಲರ ಮೊದಲ ಆದ್ಯತೆಯಾಗಿದೆ.