Asianet Suvarna News Asianet Suvarna News

ಶಾಲಾ ಮಕ್ಕಳಿಂದ 100 ರು. ಸಂಗ್ರಹಕ್ಕೆ ಸಿದ್ದರಾಮಯ್ಯ ಗರಂ

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಸ್ಥಗಿತಗೊಂಡಿರುವ ಎಲ್ಲಾ ಯೋಜನೆಗಳನ್ನು ಪುನರ್‌ ಆರಂಭಿಸಬೇಕು ಎಂದು ಒತ್ತಾಯಿಸಿದ ಸಿದ್ದರಾಮಯ್ಯ 

Former CM Siddaramaiah React to 100 Rs Collect from School Children in Karnataka grg
Author
First Published Oct 22, 2022, 2:00 AM IST

ಬೆಂಗಳೂರು(ಅ.22): ಸರ್ಕಾರಿ ಶಾಲಾ ಮಕ್ಕಳಿಂದ ಪ್ರತಿ ತಿಂಗಳು 100 ರು. ದೇಣಿಗೆ ಸಂಗ್ರಹಿಸುವ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ವೇದಿಕೆ ಮೇಲೆ ನಿಂತು ತೋರುವ ನಿಮ್ಮ ದಮ್‌, ತಾಕತ್ತು ವಿದ್ಯಾರ್ಥಿಗಳ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವುದರಲ್ಲಿ ತೋರಿಸಿ’ ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಸ್ಥಗಿತಗೊಂಡಿರುವ ಎಲ್ಲಾ ಯೋಜನೆಗಳನ್ನು ಪುನರ್‌ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ರಾಜ್ಯ ಸರ್ಕಾರದ ಭ್ರಷ್ಟಕಣ್ಣು ಬಿದ್ದಿದೆ. ಕಮಿಷನ್‌ ಹೆಸರಿನಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ ಹಾಕಲು ಹೊರಟಿದೆ. ಬಿಜೆಪಿ ಸರ್ಕಾರಕ್ಕೆ ಇಂತಹ ದೈನೇಸಿ ಸ್ಥಿತಿ ಬರಬಾರದಿತ್ತು’ ಎಂದು ಕಿಡಿ ಕಾರಿದರು.

ಶಿಕ್ಷಣ ನೀತಿ ವಿದ್ಯಾರ್ಥಿ ಪರ, ರಾಜಕೀಯಕ್ಕಾಗಿ ಟೀಕೆ ಬೇಡ: ಅಶ್ವತ್ಥ್‌

ವಿದ್ಯಾರ್ಥಿಗಳಿಗೆ ಹಾಲು, ಬಿಸಿಯೂಟ, ಸಮವಸ್ತ್ರ- ಶೂ, ವಿದ್ಯಾಸಿರಿ, ಹಾಸ್ಟೆಲ್‌ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಸರ್ಕಾರ ಈಗ ಅವರಿಂದ ದುಡ್ಡನ್ನೂ ಕಿತ್ತುಕೊಳ್ಳಲು ಹೊರಟಿದೆ. ನಮ್ಮ ಸರ್ಕಾರ ವ್ಯಾಸಂಗಕ್ಕೆ ನೆರವು ನೀಡಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Follow Us:
Download App:
  • android
  • ios