Asianet Suvarna News Asianet Suvarna News

ಬೆಳಗಾವಿ ಅಧಿವೇಶನ ವೇಳೆ ಅನುದಾನರಹಿತ ಶಿಕ್ಷಕರ ಉಪವಾಸ ಸತ್ಯಾಗ್ರಹ

ಕನ್ನಡ ಮಾಧ್ಯಮದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಶಾಲಾ ಕಾಲೇಜು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ಡಿ.19ರಿಂದ ಬೆಳಗಾವಿ ಅಧಿವೇಶನದ ವೇಳೆ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ‘ಕರ್ನಾಟಕ ರಾಜ್ಯ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಶಾಲಾ ಕಾಲೇಜು ಶಿಕ್ಷಕರ ಸಂಘ’ ತಿಳಿಸಿದೆ.

hunger strike by Unaided teachers during Belagavi Winter session  gow
Author
First Published Dec 10, 2022, 6:50 PM IST

ಬೆಂಗಳೂರು (ಡಿ.10): ಕನ್ನಡ ಮಾಧ್ಯಮದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಶಾಲಾ ಕಾಲೇಜು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ಡಿ.19ರಿಂದ ಬೆಳಗಾವಿ ಅಧಿವೇಶನದ ವೇಳೆ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ‘ಕರ್ನಾಟಕ ರಾಜ್ಯ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಶಾಲಾ ಕಾಲೇಜು ಶಿಕ್ಷಕರ ಸಂಘ’ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕಿರಣಕುಮಾರ ಗುರವ, 1995ರ ಬಳಿಕ ಆರಂಭವಾದ ಖಾಸಗಿ ಕನ್ನಡ ಮಾಧ್ಯಮ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲಾಗಿಲ್ಲ. ಇಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರು ಐದಾರು ಸಾವಿರ ರು. ಕನಿಷ್ಠ ಶಿಕ್ಷಣಕ್ಕೆ ದುಡಿಯುತ್ತಿದ್ದಾರೆ. ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಬೇಕು. ನಿವೃತ್ತಿ ಅಂಚಿನಲ್ಲಿರುವವರಿಗೆ ಸೂಕ್ತ ವೇತನ, ಪಿಂಚಣಿ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿ ಆಧಾರಿತ ಅನುದಾನ ವ್ಯವಸ್ಥೆ ಬದಲಾಗಿ ಹಿಂದಿನಂತೆ ಐಟಿಐ ಸಂಸ್ಥೆಗಳಿಗೆ ಸಿಬ್ಬಂದಿ ಆಧಾರಿತ ವೇತನ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆಗೆ ಒತ್ತಾಯಿಸಿ ನಡೆಸಲು ಉದ್ದೇಶಿಸಿರುವ ಉಪವಾಸ ಸತ್ಯಾಗ್ರಹದಲ್ಲಿ ಎರಡೂವರೆ ಸಾವಿರ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದರು.  ಈ ವೇಳೆ ಉಪಾಧ್ಯಕ್ಷ ರಮೇಶಗೌಡ ಪಾಟೀಲ್‌, ಸತೀಶ ಹನುಮಗೌಡ, ಅನೀಲ ಹುಡೇದ ಸೇರಿ ಇತರರಿದ್ದರು.

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಧರಣಿ
ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪದವಿ ವಿದ್ಯಾರ್ಥಿಗಳು ಎಐಡಿಎಸ್‌ಒ ನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಮಿತಿ ಜಿಲ್ಲಾಧ್ಯಕ್ಷ ಅಭಯ ದಿವಾಕರ್‌ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದರಿಂದ ವಿದ್ಯಾರ್ಥಿ ವೇತನ ಬಿಡುಗಡೆ ವಿಳಂಬವಾಗಿದೆ. ಮೊದಲ ವರ್ಷದ ಫಲಿತಾಂಶ ಪ್ರಕಟವಾಗದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಗುತ್ತಿಲ್ಲ. ಇದರಿಂದ ಬಡ ಕುಟುಂಬಗಳಿಗೆ ಸೇರಿದ ನೂರಾರು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿ ನಿಲಯಗಳು ಇಲ್ಲ. ಆದ್ದರಿಂದ ತಕ್ಷಣ ಅಗತ್ಯಕ್ಕೆ ತಕ್ಕಷ್ಟುವಿದ್ಯಾರ್ಥಿ ನಿಲಯ ಆರಂಭಿಸಬೇಕು. ಹೆಚ್ಚಿಸಿರುವ ಶುಲ್ಕವನ್ನು ಕಡಿಮೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಅನುದಾನಿತ ಶಾಲೆಗೆ ಶಿಕ್ಷಕರನ್ನು ನೇಮಿಸಲು ಶಿಕ್ಷಣ ಸಚಿವರಿಗೆ ಮನವಿ
ಮೂಡುಬಿದಿರೆ: ಸ್ವಾತಂತ್ರ್ಯ ಪೂರ್ವದಿಂದಲೂ ಅನುದಾನಿತ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆಯನ್ನು ನೀಡುತ್ತಾ ಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರ ನೇಮಕಾತಿಯ ಸಮಸ್ಯೆಯಿಂದ ಅನುದಾನಿತ ಶಿಕ್ಷಣ ಸಂಸ್ಥೆ ತೊಂದರೆಯನ್ನು ಅನುಭವಿಸುತ್ತಿದೆ. ಆದ್ದರಿಂದ ಕೇರಳ ಮಾದರಿಯಲ್ಲಿ ನಿವೃತ್ತಿಯಾದ ತಕ್ಷಣ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರನ್ನು ನೇಮಿಸುವ ಪದ್ಧತಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ವಿನಂತಿ ಪತ್ರವನ್ನು ನೀಡಿ ಅನುದಾನಿತ ಶಿಕ್ಷಣ ಸಂಸ್ಥೆಯ ಸಮಸ್ಯೆ ಪರಿಹಾರಕ್ಕಾಗಿ ವಿನಂತಿಸಿಕೊಳ್ಳಲಾಯಿತು. ತಿಳಿಸಿದರು.

Uttara Kannada :ಮಾತೃಭಾಷಾ ಶಿಕ್ಷಣಕ್ಕೆ ಒತ್ತು: ಸಚಿವ ನಾಗೇಶ

ಮೂಡುಬಿದಿರೆಯ ಎಕ್ಸಲೆಂಟ್‌ ಕಾಲೇಜಿಗೆ ಆಗಮಿಸಿರುವ ಶಿಕ್ಷಣ ಸಚಿವರಲ್ಲಿ ಈ ಬಗ್ಗೆ ಮಾತನಾಡಿ ಅನುದಾನಿತ ಶಿಕ್ಷಣ ಸಂಸ್ಥೆಯ ಸಮಸ್ಯೆಯನ್ನು ಪರಿಹರಿಸುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ಡಾ.ರಾಮಕೃಷ್ಣ ಶಿರೂರು ವಿನಂತಿಸಿ ಕೊಂಡರು.

ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರಕಾರ ಚಿಂತನೆ

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಅವೈಜ್ಞಾನಿಕವಾಗಿ ಹೆಚ್ಚುವರಿಯಾಗಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲಾಗಿದೆ. ಈ ವೈಜ್ಞಾನಿಕ ಪದ್ಧತಿಯಲ್ಲಿ ಹೆಚ್ಚುವರಿಯನ್ನು ಗುರುತಿಸದೆ ಹೊಸ ಶಿಕ್ಷಣ ನೀತಿಯ ನಿಯಮಕ್ಕೆ ಅನುಸಾರವಾಗಿ ಶಿಕ್ಷಕರ ನೇಮಕಾತಿ ಮತ್ತು ಬೋಧನಾ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಶಿಕ್ಷಣ ಸಚಿವರಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಚಾಲಕ ದೊರೆಸ್ವಾಮಿ ಕೆ.ಎನ್‌. ವಿನಂತಿಸಿದ್ದಾರೆ.

Follow Us:
Download App:
  • android
  • ios