* ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್* ಪೌಷ್ಟಿಕಾಂಶ ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲು* 16371 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ

ಬೆಂಗಳೂರು, (ಜೂ.18): ಸಿಎಂ ಆಶಯದಂತೆ ವಿದ್ಯಾರ್ಥಿಗಳಿಗೆ ಪೋಷಕಾಂಶದ ಆಹಾರವನ್ನು ಒದಗಿಸುವ ಭಾಗವಾಗಿ ಜೂನ್, ಜುಲೈ ಮಾಹೆಗಳಿಗೆ ಕೆನೆಭರಿತ‌ ಹಾಲಿನ ಪುಡಿಯನ್ನು ವಿತರಿಸಲು 16371 ಲಕ್ಷ ರೂಪಾಯಿಗಳ ಅನುದಾನವನ್ನು ಶಿಕ್ಷಣ‌ ಇಲಾಖೆ ಬಿಡುಗಡೆ ಮಾಡಿದೆ‌. ಈ ಬಗ್ಗೆ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಶಾಲೆಗಳು ಭೌತಿಕವಾಗಿ ನಡೆಯದೇ‌ ಇದ್ದರೂ ಮಧ್ಯಾಹ್ನ ಉಪಹಾರದ ಆಹಾರ ಧಾನ್ಯಗಳು, ಅಡುಗೆ ಎಣ್ಣೆ ಸೇರಿದಂತೆ ಪೂರಕ‌ ಸಾಮಗ್ರಿಗಳನ್ನು ನಿರಂತರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ದೊರಕಬೇಕು ಎನ್ನುವ ಸದುದ್ದೇಶದಿಂದ ಈಗ ಜೂನ್ ಹಾಗೂ ಜುಲೈ ಮಾಹೆಗಳಿಗೆ ಸಂಬಂಧಿಸಿದಂತೆ ಪ್ರತಿ‌ ವಿದ್ಯಾರ್ಥಿಗೆ ಪ್ರತಿ‌ ಮಾಹೆಗೆ ಅರ್ಧ ಕಿಲೋಗ್ರಾಂ ಕೆನೆಭರಿತ‌ ಹಾಲಿನ ಪುಡಿಯನ್ನು ಒದಗಿಸಲು ಆಲೋಚಿಸಿದ್ದೇವೆ. ಆ ಮೂಲಕ ನಮ್ಮ ವಿದ್ಯಾರ್ಥಿಗಳ ಆರೋಗ್ಯಕ್ಕೆ‌ ಪರಿಪೂರ್ಣ ಬೆಂಬಲವನ್ನು ದೊರಕಿಸುವ, ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶ ಸರ್ಕಾರದ್ದಾಗಿದೆ‌ ಎಂದಿದ್ದಾರೆ.

ಜುಲೈ 15 ರಿಂದ ಶಾಲೆಗಳಲ್ಲಿ ದಾಖಲಾತಿ ಆರಂಭ, ಪೂರ್ವತಯಾರಿಗೆ ಶಿಕ್ಷಕರಿಗೆ ಸೂಚನೆ 

ಸರ್ಕಾರದ ಈ ನಿರ್ಧಾರವು ನಮ್ಮ ಮಕ್ಕಳ ಪೌಷ್ಟಿಕತೆಗೆ ಪೂರಕವಾಗುವುದಷ್ಟೇ ಅಲ್ಲ, ಸಂಕಷ್ಟದಲ್ಲಿರುವ ಗ್ರಾಮೀಣ ಹಾಲು ಉತ್ಪಾದಕರ, ರೈತರ ಆರ್ಥಿಕ ಮಟ್ಟ ಸುಧಾರಿಸಲು‌ ನೆರವಾಗಲಿದೆ ಎಂದು ಸಹ ಸಚಿವರು ಹೇಳಿದ್ದಾರೆ.

ಸಾರ್ವಜನಿಕ ಶಿಕ್ಷಣ‌ ಇಲಾಖೆಯ ಆಯುಕ್ತರಿಗೆ ಈ ಹಾಲಿನ ಪುಡಿಯ ಪ್ಯಾಕೆಟ್ ವಿತರಣಾ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ‌ ನಿಗದಿ ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಇಲಾಖೆಯು ಸಲ್ಲಿಸಿದ ಪ್ರಸ್ತಾವನೆಗೆ ಅತಿಶೀಘ್ರದಲ್ಲಿ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಿಎಸ್‌ವೈ ಅವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.